ಉಡುಪಿ, ಮೇ 27: ರಾಷ್ಟ್ರೀಯ ಹೆದ್ದಾರಿ 66ರ ಅಂಬಲಪಾಡಿ ಭಾಗದಲ್ಲಿ ಸುಮಾರು 23 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಇದೀಗ ಅಂತಿಮ ಹಂತ ತಲುಪಿದ್ದು, ಜೂನ್ 15ರಿಂದ 20ರೊಳಗೆ ಮೇಲ್ಸೇತುವೆಯನ್ನು ಸಂಪೂರ್ಣವಾಗಿ ವಾಹನಗಳ ಸಂಚಾರಕ್ಕೆ ಮುಕ್ತಗೊಳಿಸುವ ಭರವಸೆಯನ್ನು ರಾಷ್ಟ್ರೀಯ ಹೆದ್ದಾರಿ ಇಲಾಖೆ ಅಧಿಕಾರಿಗಳು ನೀಡಿದ್ದಾರೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಬುಧವಾರ ಅಂಬಲಪಾಡಿ ಪ್ರದೇಶಕ್ಕೆ ಭೇಟಿ ನೀಡಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಸುಮಾರು 1300 ಮೀಟರ್ ಉದ್ದದ ಮೇಲ್ಸೇತುವೆ ಕಾಮಗಾರಿಯನ್ನು ಸ್ಥಳದಲ್ಲೇ ಪರಿಶೀಲಿಸಿದರು. ಈ ವೇಳೆ ಕಾಮಗಾರಿ ವೇಗವಾಗಿ ಸಾಗುತ್ತಿರುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು, ಮೇಲ್ಸೇತುವೆಯ ಎರಡೂ ಬದಿಗಳಲ್ಲಿ ನಿರ್ಮಾಣಗೊಳ್ಳುತ್ತಿರುವ ತಡೆಗೋಡೆ ಹಾಗೂ ಇತರ ಮೂಲಸೌಕರ್ಯ ಕಾಮಗಾರಿಗಳನ್ನು ವೀಕ್ಷಿಸಿದರು.
ಆಧುನಿಕ ತಂತ್ರಜ್ಞಾನ ಆಧಾರಿತ ಯಂತ್ರೋಪಕರಣಗಳನ್ನು ಬಳಸಿಕೊಂಡು ಕಾಮಗಾರಿಯನ್ನು ತ್ವರಿತಗತಿಯಲ್ಲಿ ನಡೆಸಲಾಗುತ್ತಿದ್ದು, ವಾಹನ ಸಂಚಾರಕ್ಕೆ ಯಾವುದೇ ತೊಂದರೆ ಆಗದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಲಾಗುತ್ತಿದೆ ಎಂದು ಅಧಿಕಾರಿಗಳು ಸಂಸದರಿಗೆ ವಿವರಿಸಿದರು. ಮೇಲ್ಸೇತುವೆ ಕಾಮಗಾರಿ ಪೂರ್ಣಗೊಂಡ ಬಳಿಕ ಅಂಬಲಪಾಡಿ ಭಾಗದ ಟ್ರಾಫಿಕ್ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆಯಲಿದೆ ಎಂಬ ವಿಶ್ವಾಸ ಸ್ಥಳೀಯರಲ್ಲಿ ವ್ಯಕ್ತವಾಗಿದೆ.
ಈ ಸಂದರ್ಭದಲ್ಲಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಮೇಲ್ಸೇತುವೆಯನ್ನು ಭಾಗಶಃ ತೆರೆಯುವ ಬದಲು ಸಂಪೂರ್ಣ ಕಾಮಗಾರಿ ಪೂರ್ಣಗೊಳಿಸಿ ಒಂದೇ ಬಾರಿ ವಾಹನ ಸಂಚಾರಕ್ಕೆ ಮುಕ್ತಗೊಳಿಸುವಂತೆ ಸೂಚಿಸಿದರು. ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಾಮಗಾರಿಗೆ ಮತ್ತಷ್ಟು ವೇಗ ನೀಡುವಂತೆ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ರಾಷ್ಟ್ರೀಯ ಹೆದ್ದಾರಿ ಇಲಾಖೆ ಅಧಿಕಾರಿಗಳು, ನಿಗದಿತ ಅವಧಿಗಿಂತ ಒಂದು ವಾರ ಹೆಚ್ಚುವರಿ ಸಮಯಾವಕಾಶ ನೀಡುವಂತೆ ಮನವಿ ಮಾಡಿದ್ದು, ಜೂನ್ 15ರಿಂದ 20ರೊಳಗೆ ಮೇಲ್ಸೇತುವೆಯ ಎರಡೂ ಬದಿ ರಸ್ತೆಯನ್ನು ಸಂಪೂರ್ಣವಾಗಿ ಸಾರ್ವಜನಿಕ ಸಂಚಾರಕ್ಕೆ ಮುಕ್ತಗೊಳಿಸುವುದಾಗಿ ಭರವಸೆ ನೀಡಿದರು.
ಪರಿಶೀಲನಾ ವೇಳೆ ಇಲಾಖೆಯ ಅಧಿಕಾರಿ ನವೀನ್, ಸಹಾಯಕ ಹರೀಶ್ ಶೆಟ್ಟಿ ಸೇರಿದಂತೆ ಹಲವು ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

