ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಇಂಡ್ಲವಾಡಿ ಗ್ರಾಮದಲ್ಲಿ ನಿರ್ಮಾಣವಾಗಲಿರುವ ದೇಶದ ಎರಡನೇ ಅತಿ ದೊಡ್ಡ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದ ನಿರ್ಮಾಣ ಕಾರ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಭವ್ಯ ಶಂಕುಸ್ಥಾಪನೆ ನೆರವೇರಿಸಿದರು. ರಾಜ್ಯದ ಕ್ರೀಡಾ ಕ್ಷೇತ್ರಕ್ಕೆ ಹೊಸ ಮೈಲುಗಲ್ಲಾಗಲಿರುವ ಈ ಮಹತ್ವಾಕಾಂಕ್ಷಿ ಯೋಜನೆಗೆ ಸಾವಿರಾರು ಜನರ ಸಮ್ಮುಖದಲ್ಲಿ ಚಾಲನೆ ನೀಡಲಾಯಿತು. ಇದೇ ವೇಳೆ ಸ್ಥಳೀಯ ಶಾಸಕ ಆನೇಕಲ್ ಶಿವಣ್ಣ ಅವರು ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳಿಗೆ ಬೆಳ್ಳಿಯ ಗದೆಯನ್ನು ಉಡುಗೊರೆಯಾಗಿ ನೀಡಿ ಸನ್ಮಾನಿಸಿದರು.
ಕರ್ನಾಟಕ ಗೃಹ ಮಂಡಳಿ ವತಿಯಿಂದ ಸುಮಾರು 100 ಎಕರೆ ವಿಶಾಲ ಪ್ರದೇಶದಲ್ಲಿ ನಿರ್ಮಾಣವಾಗಲಿರುವ ಈ ಅತ್ಯಾಧುನಿಕ ಕ್ರೀಡಾಂಗಣಕ್ಕೆ ಅಂದಾಜು 900 ಕೋಟಿ ರೂಪಾಯಿ ವೆಚ್ಚವಾಗಲಿದೆ. ಸುಮಾರು 80 ಸಾವಿರ ಪ್ರೇಕ್ಷಕರು ಏಕಕಾಲದಲ್ಲಿ ಕುಳಿತುಕೊಳ್ಳಬಹುದಾದ ಸಾಮರ್ಥ್ಯ ಹೊಂದಿರುವ ಈ ಕ್ರೀಡಾಂಗಣವು ಕೇವಲ ಕ್ರಿಕೆಟ್ ಪಂದ್ಯಗಳಿಗೆ ಮಾತ್ರವಲ್ಲದೆ, ವಿವಿಧ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಕ್ರೀಡಾಕೂಟಗಳಿಗೆ ಸಹ ವೇದಿಕೆಯಾಗಲಿದೆ. ಮುಂದಿನ 2 ರಿಂದ 3 ವರ್ಷಗಳೊಳಗೆ ಕಾಮಗಾರಿ ಪೂರ್ಣಗೊಳಿಸುವ ಗುರಿ ಸರ್ಕಾರ ಹೊಂದಿದೆ.
ಕಾರ್ಯಕ್ರಮಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಗಣ್ಯರಿಗೆ ಬೃಹತ್ ಆಪಲ್ ಹಾರ ಹಾಕಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಮಹಿಳೆಯರು ಪೂರ್ಣಕುಂಭ ಕಲಶದೊಂದಿಗೆ ಸಂಪ್ರದಾಯಬದ್ಧ ಸ್ವಾಗತ ಕೋರಿದರೆ, ವಿವಿಧ ಜಾನಪದ ಹಾಗೂ ಸಾಂಸ್ಕೃತಿಕ ಕಲಾತಂಡಗಳು ಕಾರ್ಯಕ್ರಮದ ಕಳೆ ಹೆಚ್ಚಿಸಿತು. ಸಮಾರಂಭದ ವಾತಾವರಣ ಸಂಪೂರ್ಣ ಹಬ್ಬದ ಸಂಭ್ರಮವನ್ನು ಮೂಡಿಸಿತು.
ಈ ಯೋಜನೆ ಕೇವಲ ಕ್ರಿಕೆಟ್ ಕ್ರೀಡಾಂಗಣಕ್ಕೆ ಸೀಮಿತವಾಗದೇ, ಬಹುಉದ್ದೇಶ ಕ್ರೀಡಾ ಸಂಕೀರ್ಣವಾಗಿ ರೂಪುಗೊಳ್ಳಲಿದೆ. ಒಳಾಂಗಣ ಕ್ರೀಡಾ ಸಂಕೀರ್ಣದಲ್ಲಿ ಬ್ಯಾಡ್ಮಿಂಟನ್, ಬಾಸ್ಕೆಟ್ಬಾಲ್, ವಾಲಿಬಾಲ್, ಹ್ಯಾಂಡ್ಬಾಲ್, ಟೇಬಲ್ ಟೆನ್ನಿಸ್, ಸ್ಕ್ಯಾಷ್, ಕಬಡ್ಡಿ, ಖೋ-ಖೋ, ಜುಡೋ, ಟೈಕ್ವಾಂಡೋ, ಕುಸ್ತಿ, ಫೆನ್ಸಿಂಗ್ ಹಾಗೂ ವೇಟ್ ಲಿಫ್ಟಿಂಗ್ ಸೇರಿದಂತೆ ಒಟ್ಟು 11ಕ್ಕೂ ಹೆಚ್ಚು ಕ್ರೀಡೆಗಳಿಗೆ ಅಂತರಾಷ್ಟ್ರೀಯ ಮಟ್ಟದ ಸೌಲಭ್ಯ ಕಲ್ಪಿಸಲಾಗುತ್ತಿದೆ.
ಹೊರಾಂಗಣ ಕ್ರೀಡಾ ಸೌಲಭ್ಯಗಳಲ್ಲೂ ಅತ್ಯಾಧುನಿಕ ವ್ಯವಸ್ಥೆ ಇರಲಿದೆ. ಸಿಂಥೆಟಿಕ್ ಅಥ್ಲೆಟಿಕ್ ಟ್ರ್ಯಾಕ್, ಟೆನ್ನಿಸ್ ಕೋರ್ಟ್ಗಳು, ಬಾಸ್ಕೆಟ್ಬಾಲ್ ಹಾಗೂ ವಾಲಿಬಾಲ್ ಅಂಕಣಗಳು ನಿರ್ಮಾಣವಾಗಲಿವೆ. ಇತ್ತೀಚಿನ ದಿನಗಳಲ್ಲಿ ಯುವಜನರಲ್ಲಿ ಜನಪ್ರಿಯವಾಗುತ್ತಿರುವ ಪಾಡೆಲ್ ಹಾಗೂ ಪಿಕಲ್ಬಾಲ್ ಆಟಗಳಿಗೂ ವಿಶೇಷ ಕೋರ್ಟ್ಗಳನ್ನು ನಿರ್ಮಿಸಲಾಗುತ್ತಿದೆ. ಜಲಕ್ರೀಡೆಗಳಿಗೆ ಒಲಂಪಿಕ್ ಗಾತ್ರದ ಈಜುಕೊಳ, ಹೈ-ಡೈವಿಂಗ್ ಪೂಲ್ ಹಾಗೂ ಪ್ರತ್ಯೇಕ ಅಭ್ಯಾಸ ಕೊಳಗಳನ್ನು ಸಹ ಯೋಜನೆಯಲ್ಲಿ ಸೇರಿಸಲಾಗಿದೆ.
ಕ್ರೀಡಾಂಗಣದ ಸುತ್ತಮುತ್ತ ಪ್ರೇಕ್ಷಕರ ಅನುಕೂಲಕ್ಕಾಗಿ ಬಹುಮಹಡಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗುತ್ತಿದ್ದು, ಏಕಕಾಲಕ್ಕೆ 500ಕ್ಕೂ ಹೆಚ್ಚು ವಾಹನಗಳನ್ನು ನಿಲ್ಲಿಸಬಹುದಾಗಿದೆ. ವಾಣಿಜ್ಯ ಮಳಿಗೆಗಳು, ಕ್ರೀಡಾ ಪರಿಕರಗಳ ಅಂಗಡಿಗಳು, ವಿಶಾಲ ಉಪಹಾರ ಗೃಹಗಳು, ಆಟಗಾರರು ಹಾಗೂ ಕೋಚ್ಗಳಿಗಾಗಿ ಹೈಟೆಕ್ ವಸತಿ ಗೃಹಗಳು ಸಹ ನಿರ್ಮಾಣವಾಗಲಿವೆ. ಜೊತೆಗೆ ಗಣ್ಯರ ತುರ್ತು ಸಂಚಾರಕ್ಕಾಗಿ ಹೆಲಿಪ್ಯಾಡ್, ಸಾರ್ವಜನಿಕ ಪ್ಲಾಜಾ ಹಾಗೂ ಹಸಿರು ವಲಯ ನಿರ್ಮಾಣಕ್ಕೂ ಯೋಜನೆ ರೂಪಿಸಲಾಗಿದೆ.
ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಗೃಹಸಚಿವ ಡಾ. ಜಿ. ಪರಮೇಶ್ವರ್, ಶಾಸಕ ಕೆ.ಎಂ. ಶಿವಲಿಂಗೇಗೌಡ, ಮುಖ್ಯಮಂತ್ರಿ ಕಾನೂನು ಸಲಹೆಗಾರ ಪೊನಣ್ಣ, ಶಾಸಕ ಕೃಷ್ಣಪ್ಪ ಸೇರಿದಂತೆ ಹಲವು ಪ್ರಮುಖ ನಾಯಕರು, ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಸಾವಿರಾರು ಸಂಖ್ಯೆಯ ಸಾರ್ವಜನಿಕರು ಭಾಗವಹಿಸಿದ್ದರು.
ರಾಜ್ಯದ ಕ್ರೀಡಾ ಮೂಲಸೌಕರ್ಯ ಅಭಿವೃದ್ಧಿಯಲ್ಲಿ ಈ ಯೋಜನೆ ಮಹತ್ವದ ಹೆಜ್ಜೆಯಾಗಿದ್ದು, ಮುಂದಿನ ದಿನಗಳಲ್ಲಿ ಬೆಂಗಳೂರು ಜಾಗತಿಕ ಮಟ್ಟದ ಕ್ರೀಡಾ ಕೇಂದ್ರವಾಗಿ ರೂಪುಗೊಳ್ಳುವ ನಿರೀಕ್ಷೆ ವ್ಯಕ್ತವಾಗಿದೆ.

