ಬೆಳ್ತಂಗಡಿ: ತಾಲೂಕಿನ ಪಡಂಗಡಿ ಗ್ರಾಮದ ಕನ್ನಡಿಕಟ್ಟೆ ಸಮೀಪ ಶನಿವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದಿದೆ. ಅಪಘಾತದಲ್ಲಿ ಪ್ರಗತಿಪರ ಕೃಷಿಕರ ಕುಟುಂಬದ ಸದಸ್ಯರು ಗಾಯಗೊಂಡಿದ್ದು, ಸ್ಥಳೀಯರಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ.
ಮೃತ ಮಹಿಳೆಯನ್ನು ಬಳಂಜ ಗ್ರಾಮದ ಬಳಂಜ ಫಾರ್ಮ್ನ ಮಾಲಕ ಹಾಗೂ ಪ್ರಗತಿಪರ ಕೃಷಿಕ ಅನಿಲ್ ಭಟ್ ಅವರ ಪತ್ನಿ ಶೈಲಜಾ ಭಟ್ (35) ಎಂದು ಗುರುತಿಸಲಾಗಿದೆ. ಅಪಘಾತದ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯಲ್ಲಿ ಅನಿಲ್ ಭಟ್ (45) ಅವರು ಕೂಡ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಸ್ಥಳೀಯರು ಹಾಗೂ ಪೊಲೀಸರು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ದಂಪತಿಯ ಪುತ್ರನಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ಮಾಹಿತಿ ಲಭ್ಯವಾಗಿದೆ.
ಮೂಲಗಳ ಪ್ರಕಾರ, ಅನಿಲ್ ಭಟ್ ಹಾಗೂ ಅವರ ಪತ್ನಿ ಶೈಲಜಾ ಅವರು ತಮ್ಮ ಫಾರ್ಮ್ನ ಕೆಲಸ ಮುಗಿಸಿಕೊಂಡು ಬೈಕ್ನಲ್ಲಿ ತಮ್ಮ ಸೈಟ್ ಕಡೆಗೆ ತೆರಳುತ್ತಿದ್ದರು. ಈ ವೇಳೆ ಕನ್ನಡಿಕಟ್ಟೆ ಸಮೀಪ ಎದುರಿನಿಂದ ಬಂದ ಕಾರು ಹಾಗೂ ಬೈಕ್ ನಡುವೆ ಭಾರೀ ಢಿಕ್ಕಿ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಬೈಕ್ ಸಂಪೂರ್ಣ ಜಖಂಗೊಂಡಿದ್ದು, ಶೈಲಜಾ ಅವರು ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ.
ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ನೆರವಿಗೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಸಹಕರಿಸಿದರು. ಬಳಿಕ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪಘಾತದ ನಿಖರ ಕಾರಣ ಕುರಿತು ತನಿಖೆ ಮುಂದುವರಿಸಿದ್ದಾರೆ.
ಪ್ರಗತಿಪರ ಕೃಷಿಕರಾಗಿ ಗುರುತಿಸಿಕೊಂಡಿದ್ದ ಅನಿಲ್ ಭಟ್ ಅವರ ಕುಟುಂಬದಲ್ಲಿ ನಡೆದ ಈ ದುರಂತ ಘಟನೆ ಬಳಂಜ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಆಘಾತ ಮೂಡಿಸಿದೆ. ಮೃತ ಶೈಲಜಾ ಅವರ ನಿಧನಕ್ಕೆ ಬಂಧು-ಬಳಗ ಹಾಗೂ ಸ್ಥಳೀಯರು ಸಂತಾಪ ಸೂಚಿಸಿದ್ದಾರೆ.
