ಮಂಗಳೂರು: ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿದ ಯುವ ಭಾಗವತನೊಬ್ಬ ಕರ್ತವ್ಯ ನಿರತ ಪೊಲೀಸರಿಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಳಿಸಿದ ಘಟನೆ ಮಂಗಳೂರು ನಗರದ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ವೇರ್ ಹೌಸ್ ಸಮೀಪ ತಡರಾತ್ರಿ ನಡೆದಿದೆ. ಗಾಯಗೊಂಡ ಪೊಲೀಸ್ ಸಿಬ್ಬಂದಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮಂಗಳೂರು ನಗರ ಸಂಚಾರ ಪಶ್ಚಿಮ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ವಿಠ್ಠಲ್ ದಾಸ್ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಕುಮಾರ ಅವರು ರಾತ್ರಿ ವೇಳೆ ಕರ್ತವ್ಯ ನಿರ್ವಹಿಸುತ್ತಿದ್ದರು. ಇದೇ ವೇಳೆ ಬಲ್ಲಾಲ್ ಬಾಗ್ ಜಂಕ್ಷನ್ ಬಳಿ ಸಂಭವಿಸಿದ್ದ ಅಪಘಾತ ಪ್ರಕರಣವನ್ನು ಪರಿಶೀಲಿಸಿ ಠಾಣೆಗೆ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.
KA-19 MP-9623 ಸಂಖ್ಯೆಯ ಕಾರನ್ನು ಚಲಾಯಿಸಿಕೊಂಡು ಬಂದಿದ್ದ ಧೀರಜ್ ರೈ ಎಂಬಾತ ಅತೀವೇಗ ಹಾಗೂ ಅಜಾಗರೂಕತೆಯಿಂದ ವಾಹನ ಚಲಾಯಿಸಿಕೊಂಡು ಬಂದಿದ್ದು, ರಸ್ತೆ ಬದಿಯಲ್ಲಿ ನಿಂತಿದ್ದ ಪೊಲೀಸ್ ಸಿಬ್ಬಂದಿಗೆ ಏಕಾಏಕಿ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಹೆಡ್ ಕಾನ್ಸ್ಟೇಬಲ್ ವಿಠ್ಠಲ್ ದಾಸ್ ಅವರು ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ.
ಘಟನೆಯ ತಕ್ಷಣ ಸ್ಥಳದಲ್ಲಿದ್ದ ಸಾರ್ವಜನಿಕರು ಹಾಗೂ ಸಹೋದ್ಯೋಗಿ ಪೊಲೀಸರು ಗಾಯಾಳುವನ್ನು ಆಟೋ ರಿಕ್ಷಾದ ಮೂಲಕ ಅತ್ತಾವರದ ಕೆಎಂಸಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಆಸ್ಪತ್ರೆಯಲ್ಲಿ ವೈದ್ಯರು ಪರೀಕ್ಷಿಸಿದಾಗ ವಿಠ್ಠಲ್ ದಾಸ್ ಅವರ ಸ್ಪೈನಲ್ ಕಾರ್ಡ್ಗೆ ತೀವ್ರ ಪೆಟ್ಟಾಗಿರುವುದು ಪತ್ತೆಯಾಗಿದ್ದು, ಸೊಂಟದ ಕೆಳಭಾಗದ ಚಲನೆ ಮತ್ತು ಶಕ್ತಿ ಕುಂದಿರುವುದಾಗಿ ತಿಳಿದುಬಂದಿದೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿರುವುದಾಗಿ ಆಸ್ಪತ್ರೆ ಮೂಲಗಳು ತಿಳಿಸಿವೆ.
ಪ್ರಾಥಮಿಕ ತನಿಖೆಯಲ್ಲಿ ಕಾರು ಚಾಲಕ ಧೀರಜ್ ರೈ ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿದ್ದದ್ದು ಬೆಳಕಿಗೆ ಬಂದಿದೆ. ಅಲ್ಲದೆ ಆತ ರಾಂಗ್ ಸೈಡ್ನಲ್ಲಿ ವೇಗವಾಗಿ ಕಾರು ಚಲಾಯಿಸಿಕೊಂಡು ಬಂದು ನಿಯಂತ್ರಣ ಕಳೆದುಕೊಂಡ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಶಂಕಿಸಿದ್ದಾರೆ.
ಘಟನೆಯ ಬಳಿಕ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಸಂಬಂಧ ಮಂಗಳೂರು ನಗರ ಸಂಚಾರ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

