ಉಡುಪಿ, ಮೇ 25: ಸಾರ್ವಜನಿಕರಿಂದ ನಿರಂತರವಾಗಿ ಬಂದಿದ್ದ ಭ್ರಷ್ಟಾಚಾರ ಹಾಗೂ ಕಡತ ವಿಲೇವಾರಿಯಲ್ಲಿ ವಿಳಂಬದ ಕುರಿತ ದೂರುಗಳ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಸೋಮವಾರ ಅಪರಾಹ್ನ ಬ್ರಹ್ಮಾವರ ತಾಲೂಕು ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಗೆ ದಿಢೀರ್ ದಾಳಿ ನಡೆಸಿ ಸಮಗ್ರ ಪರಿಶೀಲನೆ ನಡೆಸಿದರು. ದಾಳಿಯ ವೇಳೆ ಕಚೇರಿಯ ವಿವಿಧ ವಿಭಾಗಗಳಲ್ಲಿದ್ದ ಕಡತಗಳು, ದಾಖಲೆಗಳು ಹಾಗೂ ಆಡಳಿತಾತ್ಮಕ ಕಾರ್ಯವೈಖರಿಯನ್ನು ಅಧಿಕಾರಿಗಳು ಸೂಕ್ಷ್ಮವಾಗಿ ಪರಿಶೀಲಿಸಿದರು.
ಬೆಂಗಳೂರು ಲೋಕಾಯುಕ್ತ ಕಚೇರಿಯಿಂದ ಶೋಧನಾ ವಾರಂಟ್ ಪಡೆದು ನಡೆಸಲಾದ ಈ ವಿಶೇಷ ಕಾರ್ಯಾಚರಣೆ ಮಂಗಳೂರು ಲೋಕಾಯುಕ್ತ ಎಸ್ಪಿ ದಿನೇಶ್ಕುಮಾರ್ ಅವರ ಮಾರ್ಗದರ್ಶನದಲ್ಲಿ ನಡೆಯಿತು. ಕಾರ್ಯಾಚರಣೆಯಲ್ಲಿ ಉಡುಪಿ ಲೋಕಾಯುಕ್ತ ಡಿವೈಎಸ್ಪಿ ಹಾಲಮೂರ್ತಿ ರಾವ್ ನೇತೃತ್ವವಹಿಸಿದ್ದು, ಪೊಲೀಸ್ ಇನ್ಸ್ಪೆಕ್ಟರ್ಗಳಾದ ಮಂಜುನಾಥ್, ರಾಜೇಂದ್ರ ನಾಯ್ಕ್, ಮಂಗಳೂರು ಲೋಕಾಯುಕ್ತ ಇನ್ಸ್ಪೆಕ್ಟರ್ ಭಾರತಿ ಸೇರಿದಂತೆ ಉಡುಪಿ ಮತ್ತು ಮಂಗಳೂರು ಲೋಕಾಯುಕ್ತ ಕಚೇರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.
ತಹಶೀಲ್ದಾರ್ ಕಚೇರಿಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿದ ಲೋಕಾಯುಕ್ತ ಅಧಿಕಾರಿಗಳು, ವಿಲೇವಾರಿಗೆ ಬಾಕಿ ಉಳಿದಿದ್ದ ಅನೇಕ ಕಡತಗಳನ್ನು ಪರಿಶೀಲಿಸಿದರು. ಕೆಲ ಪ್ರಕರಣಗಳಲ್ಲಿ ನಿಯಮಬಾಹಿರವಾಗಿ ಕಡತಗಳನ್ನು ವಿಲೇವಾರಿ ಮಾಡಲಾಗಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಸಂಬಂಧಿತ ದಾಖಲೆಗಳನ್ನು ಪರಿಶೀಲಿಸಿ ಕೆಲವು ಮಹತ್ವದ ಕಡತಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ದಾಖಲೆಗಳ ಪರಿಶೀಲನೆಯ ವೇಳೆ ಅನೇಕ ಆಡಳಿತಾತ್ಮಕ ಅಕ್ರಮಗಳ ಸುಳಿವು ದೊರೆತಿರುವ ಸಾಧ್ಯತೆ ವ್ಯಕ್ತವಾಗಿದೆ.
ಪರಿಶೀಲನೆಯ ವೇಳೆ ಪತ್ತೆಯಾದ ಅಂಶಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸಿಬ್ಬಂದಿಯಿಂದ ಮಾಹಿತಿಯನ್ನು ಸಂಗ್ರಹಿಸಲಾಗಿದ್ದು, ಮುಂದಿನ ಹಂತದಲ್ಲಿ ಸಮಗ್ರ ವರದಿ ಸಿದ್ಧಪಡಿಸಿ ಲೋಕಾಯುಕ್ತ ಇಲಾಖೆಗೆ ಸಲ್ಲಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವರದಿ ಆಧಾರದ ಮೇಲೆ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಸಾಧ್ಯತೆಯೂ ಇದೆ ಎಂದು ಮೂಲಗಳು ತಿಳಿಸಿವೆ.
ಸೋಮವಾರ ಅಪರಾಹ್ನ ಆರಂಭವಾದ ದಾಳಿ ಹಾಗೂ ದಾಖಲೆಗಳ ಪರಿಶೀಲನೆ ಕಾರ್ಯಾಚರಣೆ ತಡರಾತ್ರಿವರೆಗೂ ಮುಂದುವರಿದಿದ್ದು, ಮಂಗಳವಾರವೂ ಈ ಪರಿಶೀಲನೆ ಮುಂದುವರಿಯಲಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ದಿಢೀರ್ ದಾಳಿಯಿಂದ ತಾಲೂಕು ಸೌಧದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಸಾರ್ವಜನಿಕರಲ್ಲಿಯೂ ಪ್ರಕರಣದ ಕುರಿತು ಭಾರೀ ಚರ್ಚೆ ನಡೆಯುತ್ತಿದೆ.

