ಬೆಂಗಳೂರು: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬದವರ ವಿರುದ್ಧ ಕೃತಕ ಬುದ್ಧಿಮತ್ತೆ (AI) ಬಳಸಿ ಸೃಷ್ಟಿಸಲಾದ ಮಾನಹಾನಿಕರ ಫೋಟೋ, ವಿಡಿಯೋ ಹಾಗೂ ಇತರ ಆನ್ಲೈನ್ ಕಂಟೆಂಟ್ಗಳನ್ನು ಸಾಮಾಜಿಕ ಜಾಲತಾಣಗಳಿಂದ ಒಂದು ವಾರದೊಳಗೆ ತೆರವುಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ನಿರ್ದೇಶಕರಾದ ಶೀನಪ್ಪ, ನಂದೀಶ್ ಕುಮಾರ್ ಜೈನ್, ವೀರೇಂದ್ರ ಹೆಗ್ಗಡೆ ಅವರ ಸಹೋದರ ಪುತ್ರ ಡಿ. ನಿಶ್ಚಲ್ ಹಾಗೂ ಪಿ. ಸುನೀಲ್ ಅವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಆರ್. ಕೃಷ್ಣ ಕುಮಾರ್ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿ ಈ ಆದೇಶ ನೀಡಿದೆ. ಅರ್ಜಿಯನ್ನು ಇತ್ಯರ್ಥಪಡಿಸುವ ವೇಳೆ ಪೀಠವು ರಾಜ್ಯ ಸರ್ಕಾರ ಹಾಗೂ ಸಂಬಂಧಿತ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆಗಳನ್ನು ನೀಡಿದೆ.
ನ್ಯಾಯಪೀಠವು ತನ್ನ ಆದೇಶದಲ್ಲಿ, ಒಂದು ವಾರದೊಳಗೆ ರಾಜ್ಯ ಸರ್ಕಾರ ಹಾಗೂ ಕೇಂದ್ರ ವಿಭಾಗದ ಸಿಇಎನ್ ಪೊಲೀಸರು ಎಲ್ಲಾ ಆಕ್ಷೇಪಾರ್ಹ ಮತ್ತು ಮಾನಹಾನಿಕರ ಫೋಟೋ, ವಿಡಿಯೋ ಹಾಗೂ ಕಂಟೆಂಟ್ಗಳನ್ನು ಕಾನೂನು ಪ್ರಕ್ರಿಯೆಯಡಿ ಸಾಮಾಜಿಕ ಜಾಲತಾಣಗಳಿಂದ ತೆಗೆದುಹಾಕಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದೆ. ಈ ಹಿನ್ನೆಲೆಯಲ್ಲಿ ಗೂಗಲ್, ಮೆಟಾ, ವಾಟ್ಸಾಪ್ ಹಾಗೂ ಇನ್ಸ್ಟಾಗ್ರಾಂ ಸೇರಿದಂತೆ ಪ್ರಮುಖ ಸಾಮಾಜಿಕ ಮಾಧ್ಯಮ ಸಂಸ್ಥೆಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡುವಂತೆ ಕೂಡ ಪೀಠ ಸೂಚಿಸಿದೆ.
ಅರ್ಜಿದಾರರ ಪರವಾಗಿ ಹಾಜರಾದ ವಕೀಲ ಎಸ್. ರಾಜಶೇಖರ್ ಅವರು, ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬ ಯಾವುದೇ ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿಲ್ಲವಾದರೂ, ಅವರ ವಿರುದ್ಧ ತಿರುಚಿದ ಹಾಗೂ ಮಾನಹಾನಿಕರ ಕಂಟೆಂಟ್ಗಳನ್ನು ನಿರಂತರವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಲಾಗುತ್ತಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಈ ರೀತಿಯ ಕಂಟೆಂಟ್ನಿಂದ ಕುಟುಂಬದ ಗೌರವಕ್ಕೆ ಧಕ್ಕೆ ಉಂಟಾಗುತ್ತಿದ್ದು, ತಪ್ಪಿಲ್ಲದಿದ್ದರೂ ಅನಗತ್ಯ ಮುಜುಗರವನ್ನು ಎದುರಿಸಬೇಕಾಗಿದೆ ಎಂದು ಅವರು ವಾದಿಸಿದರು.
ಅವರು ಮುಂದುವರಿದು, ಸಾಮಾಜಿಕ ಮಾಧ್ಯಮ ಸಂಸ್ಥೆಗಳು ಕೇವಲ ಮಧ್ಯಸ್ಥಿಕೆ ವೇದಿಕೆಗಳಾಗಿರುವುದರಿಂದ ಇಂತಹ ಕಂಟೆಂಟ್ ಹರಡುವುದನ್ನು ತಡೆಯುವ ಜವಾಬ್ದಾರಿ ಸರ್ಕಾರ ಹಾಗೂ ಸಿಇಎನ್ ಪೊಲೀಸರಿಗೆ ಇದೆ ಎಂದು ವಾದಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಬೇಕೆಂದು ಮನವಿ ಮಾಡಿದರು.
ಇನ್ನು ಸರ್ಕಾರದ ಪರ ವಕೀಲರು ನ್ಯಾಯಪೀಠಕ್ಕೆ ತಿಳಿಸಿದಂತೆ, ಅರ್ಜಿದಾರರ ಮನವಿಯನ್ನು ಪರಿಶೀಲಿಸಲು ಮತ್ತು ಸೂಕ್ತ ಕ್ರಮ ಕೈಗೊಳ್ಳಲು ಸಂಬಂಧಿತ ಪ್ರಾಧಿಕಾರಕ್ಕೆ ಕಾಲಾವಕಾಶ ನೀಡಿದರೆ ಅಗತ್ಯ ಕಾರ್ಯಾಚರಣೆ ನಡೆಸಲಾಗುವುದು ಎಂದು ತಿಳಿಸಿದರು. ಈ ಎಲ್ಲಾ ಅಂಶಗಳನ್ನು ಪರಿಗಣಿಸಿದ ನ್ಯಾಯಪೀಠವು ಅಂತಿಮವಾಗಿ ಅರ್ಜಿಯನ್ನು ಇತ್ಯರ್ಥಪಡಿಸಿ ನಿರ್ದೇಶನಗಳನ್ನು ನೀಡಿದೆ.