ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ ಬೆನ್ನಲ್ಲೇ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭಾವುಕವಾಗಿ ಪ್ರತಿಕ್ರಿಯಿಸಿದ್ದು, ಸಿದ್ದರಾಮಯ್ಯ ಅವರ ರಾಜಕೀಯ ಜೀವನ, ಆಡಳಿತ ಸಾಮರ್ಥ್ಯ ಹಾಗೂ ಪಕ್ಷದ ಮೇಲಿನ ಅವರ ಕೊಡುಗೆಯನ್ನು ಸ್ಮರಿಸಿ ಪ್ರಶಂಸಿಸಿದ್ದಾರೆ. ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಸಿದ್ದರಾಮಯ್ಯ ಅವರನ್ನು ಕರ್ನಾಟಕದ ರಾಜಕೀಯ ಇತಿಹಾಸದ ಅತ್ಯಂತ ಯಶಸ್ವಿ ಮತ್ತು ಪ್ರಭಾವಶಾಲಿ ನಾಯಕರಲ್ಲಿ ಒಬ್ಬರೆಂದು ಬಣ್ಣಿಸಿದ್ದಾರೆ.
“ದೇವರು ವರವನ್ನೂ ಕೊಡುವುದಿಲ್ಲ, ಶಾಪವನ್ನೂ ಕೊಡುವುದಿಲ್ಲ. ಆತನು ಕೇವಲ ಅವಕಾಶವನ್ನು ನೀಡುತ್ತಾನೆ. ಆ ಅವಕಾಶವನ್ನು ನಾವು ಹೇಗೆ ಬಳಸಿಕೊಳ್ಳುತ್ತೇವೆ ಮತ್ತು ಏನು ಸಾಧನೆ ಮಾಡುತ್ತೇವೆ ಎಂಬುದೇ ಮುಖ್ಯ. ಅದಕ್ಕೆ ಅತ್ಯುತ್ತಮ ಉದಾಹರಣೆ ಸಿದ್ದರಾಮಯ್ಯ” ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಮೈಸೂರು ಜಿಲ್ಲೆಯ ಒಂದು ಸಣ್ಣ ಹಳ್ಳಿಯಲ್ಲಿ ಜನಿಸಿ, ಸಾಮಾನ್ಯ ಕುಟುಂಬದ ಹಿನ್ನೆಲೆಯಿಂದ ಹೋರಾಟದ ಮೂಲಕ ರಾಜಕೀಯ ಕ್ಷೇತ್ರಕ್ಕೆ ಪ್ರವೇಶಿಸಿದ ಸಿದ್ದರಾಮಯ್ಯ ಅವರು ತಮ್ಮ ಪರಿಶ್ರಮ, ದೃಢ ಸಂಕಲ್ಪ ಹಾಗೂ ಜನಪರ ನಿಲುವುಗಳಿಂದ ರಾಜ್ಯದ ಅತ್ಯುನ್ನತ ಹುದ್ದೆಯಾದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಸಾಮಾಜಿಕ ನ್ಯಾಯದ ಹರಿಕಾರ ಹಾಗೂ ಬಡವರ ಬಂಧುವಾಗಿ ಗುರುತಿಸಿಕೊಂಡಿರುವ ಸಿದ್ದರಾಮಯ್ಯ ಅವರು ತಮ್ಮ ಆಡಳಿತದ ಮೂಲಕ ರಾಜ್ಯದ ಜನಮನದಲ್ಲಿ ವಿಶೇಷ ಸ್ಥಾನವನ್ನು ಗಳಿಸಿದ್ದಾರೆ ಎಂದು ತಿಳಿಸಿದ್ದಾರೆ.
ರಾಜ್ಯದ ಅಭಿವೃದ್ಧಿ, ಜನಪರ ಯೋಜನೆಗಳ ಅನುಷ್ಠಾನ ಹಾಗೂ ವಿವಿಧ ಕ್ಷೇತ್ರಗಳ ಪ್ರಗತಿಗೆ ಸಿದ್ದರಾಮಯ್ಯ ನೀಡಿರುವ ಕೊಡುಗೆ ಅವಿಸ್ಮರಣೀಯವಾಗಿದೆ. ಸುಮಾರು ಐದು ದಶಕಗಳ ರಾಜಕೀಯ ಅನುಭವ ಹೊಂದಿರುವ ಅವರು ಸದಾ ಸಾಮಾಜಿಕ ಕಳಕಳಿ ಹಾಗೂ ಜನಸಾಮಾನ್ಯರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಆಡಳಿತ ನಡೆಸಿದ್ದಾರೆ. ಇದೇ ಕಾರಣಕ್ಕೆ ಅವರು ಜನಪ್ರಿಯ ಹಾಗೂ ಪ್ರಭಾವಿ ನಾಯಕರಾಗಿ ಹೊರಹೊಮ್ಮಿದ್ದಾರೆ ಎಂದು ಡಿಕೆ ಶಿವಕುಮಾರ್ ಅಭಿಪ್ರಾಯಪಟ್ಟಿದ್ದಾರೆ.
2020ರಲ್ಲಿ ತಾವು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ದಿನದಿಂದ ಇಂದಿನವರೆಗೂ ಸಿದ್ದರಾಮಯ್ಯ ಅವರು ತಮ್ಮ ಹೆಗಲಿಗೆ ಹೆಗಲು ಕೊಟ್ಟು ಪಕ್ಷ ಸಂಘಟನೆಯ ಕಾರ್ಯದಲ್ಲಿ ಸಕ್ರಿಯವಾಗಿ ಜೊತೆಯಾಗಿದ್ದರು ಎಂದು ಡಿಕೆ ಶಿವಕುಮಾರ್ ಸ್ಮರಿಸಿದರು. ಪಕ್ಷವನ್ನು ಬಲಪಡಿಸುವಲ್ಲಿ ಹಾಗೂ ಕಾರ್ಯಕರ್ತರಲ್ಲಿ ಆತ್ಮವಿಶ್ವಾಸ ತುಂಬುವಲ್ಲಿ ಸಿದ್ದರಾಮಯ್ಯ ಅವರ ಪಾತ್ರ ಮಹತ್ವದ್ದಾಗಿದೆ ಎಂದು ಅವರು ಹೇಳಿದರು.
ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರದಲ್ಲಿ ಸಚಿವನಾಗಿ ಹಾಗೂ ಉಪ ಮುಖ್ಯಮಂತ್ರಿಯಾಗಿ ಕೆಲಸ ಮಾಡುವ ಅವಕಾಶ ದೊರೆತಿದ್ದು ತಮ್ಮ ರಾಜಕೀಯ ಜೀವನದ ಒಂದು ಭಾಗ್ಯಕರ ಘಟ್ಟ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಅವರ ಮಾರ್ಗದರ್ಶನ, ಅನುಭವ ಹಾಗೂ ನಾಯಕತ್ವದಿಂದ ತಮಗೆ ಅನೇಕ ವಿಷಯಗಳನ್ನು ಕಲಿಯಲು ಸಾಧ್ಯವಾಗಿದೆ ಎಂದು ಅವರು ಉಲ್ಲೇಖಿಸಿದ್ದಾರೆ.
ಮುಂದಿನ ದಿನಗಳಲ್ಲಿಯೂ ರಾಜ್ಯದ ಹಿತದೃಷ್ಟಿಯಿಂದ ಹಾಗೂ ಕಾಂಗ್ರೆಸ್ ಪಕ್ಷದ ಬಲವರ್ಧನೆಗಾಗಿ ಸಿದ್ದರಾಮಯ್ಯ ಅವರ ಮಾರ್ಗದರ್ಶನ ಮುಂದುವರಿಯಬೇಕು ಎಂಬ ಆಶಯವನ್ನು ಡಿಕೆ ಶಿವಕುಮಾರ್ ವ್ಯಕ್ತಪಡಿಸಿದ್ದಾರೆ. ಅವರ ಅನುಭವ ಮತ್ತು ದೂರದೃಷ್ಟಿ ರಾಜ್ಯದ ಅಭಿವೃದ್ಧಿಗೆ ಹಾಗೂ ಪಕ್ಷದ ಸಂಘಟನೆಗೆ ಇನ್ನಷ್ಟು ಶಕ್ತಿ ನೀಡಲಿದೆ ಎಂಬ ವಿಶ್ವಾಸವನ್ನೂ ಅವರು ವ್ಯಕ್ತಪಡಿಸಿದ್ದಾರೆ.
ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ದೀರ್ಘಾವಧಿ ಸೇವೆ ಸಲ್ಲಿಸಿದ ಹಾಗೂ ಜನಮಾನಸದಲ್ಲಿ ಶಾಶ್ವತ ಸ್ಥಾನ ಪಡೆದ ನಾಯಕರಲ್ಲಿ ಸಿದ್ದರಾಮಯ್ಯ ಒಬ್ಬರು. ಅವರು ಕೇವಲ ರಾಜ್ಯ ರಾಜಕಾರಣಕ್ಕಷ್ಟೇ ಸೀಮಿತವಾಗದೆ ರಾಷ್ಟ್ರೀಯ ಮಟ್ಟದಲ್ಲಿಯೂ ತಮ್ಮದೇ ಆದ ಪ್ರಭಾವ ಮೂಡಿಸಿರುವ ಧೀಮಂತ ನಾಯಕ ಎಂದು ಡಿಕೆ ಶಿವಕುಮಾರ್ ಪ್ರಶಂಸಿಸಿದ್ದಾರೆ.
ರಾಜಕೀಯ ಬದಲಾವಣೆಗಳ ಈ ಸಂದರ್ಭದಲ್ಲಿ ಕರ್ನಾಟಕದ ಅಭಿವೃದ್ಧಿ ಮತ್ತು ಜನರ ಕಲ್ಯಾಣವೇ ನಮ್ಮೆಲ್ಲರ ಆದ್ಯತೆಯಾಗಬೇಕು. ರಾಜ್ಯದ ಪ್ರಗತಿಗಾಗಿ ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸೋಣ ಎಂದು ಡಿ.ಕೆ. ಶಿವಕುಮಾರ್ ಕರೆ ನೀಡಿದ್ದಾರೆ.

