ಜೂ.1ರಿಂದ ಕರ್ನಾಟಕ ಕರಾವಳಿಯಲ್ಲಿ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

KARNATAKA NEWS LIVE
By -
0

 

karnataka-coastal-mechanised-fishing-ban-from-june-1-udupi

ಉಡುಪಿ: ಕರ್ನಾಟಕ ಕಡಲ ಮೀನುಗಾರಿಕೆ ನಿಯಂತ್ರಣ ಕಾಯ್ದೆ 1986ರ ಅನ್ವಯ ರಾಜ್ಯ ಸರ್ಕಾರ ಹೊರಡಿಸಿರುವ ಅಧಿಸೂಚನೆಯಂತೆ ಉಡುಪಿ ಜಿಲ್ಲೆಯನ್ನು ಒಳಗೊಂಡಂತೆ ಸಂಪೂರ್ಣ ಕರ್ನಾಟಕ ಕರಾವಳಿಯಲ್ಲಿ 2026ರ ಜೂನ್ 1ರಿಂದ ಜುಲೈ 31ರವರೆಗೆ ಯಾಂತ್ರೀಕೃತ ಮೀನುಗಾರಿಕೆಗೆ ಸಂಪೂರ್ಣ ನಿಷೇಧ ಹೇರಲಾಗಿದೆ. ಮಳೆಗಾಲದ ಅವಧಿಯಲ್ಲಿ ಸಮುದ್ರ ಜೀವ ಸಂಪತ್ತಿನ ಸಂರಕ್ಷಣೆ ಹಾಗೂ ಮೀನುಗಳ ಸಂತಾನೋತ್ಪತ್ತಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.


ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು ಈ ಕುರಿತು ಆದೇಶ ಹೊರಡಿಸಿದ್ದು, ಯಾವುದೇ ಬಲೆಗಳು ಅಥವಾ ಯಾಂತ್ರಿಕ ಸಾಧನಗಳನ್ನು ಬಳಸಿ ಮೀನುಗಾರಿಕೆ ನಡೆಸುವ ಯಾಂತ್ರೀಕೃತ ದೋಣಿಗಳ ಸಂಚಾರ ಮತ್ತು ಮೀನುಗಾರಿಕಾ ಚಟುವಟಿಕೆಗಳನ್ನು 61 ದಿನಗಳ ಕಾಲ ಸಂಪೂರ್ಣ ನಿಷೇಧಿಸಲಾಗಿದೆ. ಜೊತೆಗೆ 10 ಅಶ್ವಶಕ್ತಿ (ಎಚ್‌ಪಿ) ಸಾಮರ್ಥ್ಯಕ್ಕಿಂತ ಹೆಚ್ಚಿನ ಇನ್‌ಬೋರ್ಡ್ ಅಥವಾ ಔಟ್‌ಬೋರ್ಡ್ ಎಂಜಿನ್ ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳಿಗೂ ಈ ನಿಷೇಧ ಅನ್ವಯವಾಗಲಿದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.


ಆದರೆ ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿ 10 ಅಶ್ವಶಕ್ತಿವರೆಗಿನ ಸಾಮರ್ಥ್ಯದ ಮೋಟರೀಕೃತ ದೋಣಿಗಳು ಹಾಗೂ ಸಾಂಪ್ರದಾಯಿಕ ನಾಡದೋಣಿಗಳಿಗೆ ಈ ಅವಧಿಯಲ್ಲಿ ಮೀನುಗಾರಿಕೆಗೆ ಅವಕಾಶ ನೀಡಲಾಗಿದೆ. ಆದರೆ ಹವಾಮಾನ ಇಲಾಖೆಯಿಂದ ಸಮುದ್ರದಲ್ಲಿ ವೈಪರೀತ್ಯದ ಮುನ್ಸೂಚನೆ ಬಂದಲ್ಲಿ ಮೀನುಗಾರರು ಕಡ್ಡಾಯವಾಗಿ ಸರ್ಕಾರದ ಸೂಚನೆಗಳನ್ನು ಪಾಲಿಸಬೇಕು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.


ಜೂನ್ 1ರಿಂದ ಮೀನುಗಾರಿಕಾ ನಿಷೇಧ ಜಾರಿಗೆ ಬರುತ್ತಿರುವ ಹಿನ್ನೆಲೆ ಎಲ್ಲಾ ಯಾಂತ್ರೀಕೃತ ಮೀನುಗಾರಿಕಾ ದೋಣಿಗಳು ಮೇ 31ರೊಳಗೆ ಬಂದರು ಪ್ರವೇಶಿಸಬೇಕು ಎಂದು ಜಿಲ್ಲಾಡಳಿತ ಸೂಚಿಸಿದೆ. ನಿಗದಿತ ಅವಧಿಯ ಬಳಿಕ ಬಂದರು ಪ್ರವೇಶಿಸುವ ದೋಣಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.


ಮೀನುಗಾರಿಕೆ ನಿಷೇಧ ಆದೇಶವನ್ನು ಉಲ್ಲಂಘಿಸುವ ದೋಣಿಗಳು ಹಾಗೂ ಮೀನುಗಾರರ ವಿರುದ್ಧ ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ 1986ರ ಅನ್ವಯ ಕಠಿಣ ಕ್ರಮ ಜರುಗಿಸಲಾಗುವುದು. ಜೊತೆಗೆ ತಪ್ಪಿತಸ್ಥ ದೋಣಿಗಳಿಗೆ ಒಂದು ವರ್ಷದ ಅವಧಿಗೆ ರಾಜ್ಯ ಸರ್ಕಾರದಿಂದ ಲಭ್ಯವಾಗುವ ಮಾರಾಟ ತೆರಿಗೆ ರಹಿತ ಡೀಸೆಲ್ ಸೌಲಭ್ಯವನ್ನು ಕೂಡ ರದ್ದುಪಡಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.


ಮಳೆಗಾಲದ ಈ ಎರಡು ತಿಂಗಳ ಅವಧಿಯಲ್ಲಿ ಸಮುದ್ರದಲ್ಲಿ ಮೀನುಗಳ ಸಂತಾನೋತ್ಪತ್ತಿ ಹೆಚ್ಚಾಗುವ ಹಿನ್ನೆಲೆಯಲ್ಲಿ ಪ್ರತಿವರ್ಷ ಸರ್ಕಾರ ಮೀನುಗಾರಿಕಾ ನಿಷೇಧ ಜಾರಿಗೊಳಿಸುತ್ತದೆ. ಇದರ ಮೂಲಕ ಸಮುದ್ರ ಜೀವ ಸಂಪತ್ತಿನ ಸಮತೋಲನ ಕಾಪಾಡುವುದು ಹಾಗೂ ಭವಿಷ್ಯದಲ್ಲಿ ಮೀನು ಉತ್ಪಾದನೆ ಹೆಚ್ಚಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ಮೀನುಗಾರಿಕಾ ಇಲಾಖೆ ತಿಳಿಸಿದೆ.


ಜಿಲ್ಲೆಯ ಕರಾವಳಿ ಭಾಗದ ಎಲ್ಲಾ ಮೀನುಗಾರರು ಸರ್ಕಾರದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಿ ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

Post a Comment

0 Comments

Post a Comment (0)
3/related/default