ಮಂಗಳೂರು: ದೇಶದ ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ನೀಡಿರುವ ಹೇಳಿಕೆಗಳು ಜವಾಬ್ದಾರಿಯುತ ಸ್ಥಾನಕ್ಕೆ ತಕ್ಕದ್ದಲ್ಲ ಮತ್ತು ಅವು ಬಾಲಿಶತನದಿಂದ ಕೂಡಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ತೀವ್ರವಾಗಿ ಟೀಕಿಸಿದ್ದಾರೆ. ವಿದೇಶಿ ಪ್ರವಾಸ ಮಾಡಬೇಡಿ, ಚಿನ್ನ ಖರೀದಿಸಬೇಡಿ ಹಾಗೂ ವಾಹನ ಸಂಚಾರವನ್ನು ನಿಯಮಿತಗೊಳಿಸಿ ಎಂಬ ಪ್ರಧಾನಿಯವರ ಕರೆ ದೇಶದ ಜನತೆಯಲ್ಲಿ ಆತಂಕ ಮೂಡಿಸಿದೆ. ಜಾಗತಿಕ ಮಟ್ಟದಲ್ಲಿ ಆರ್ಥಿಕ ಏರುಪೇರಾದಾಗ ಜನರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕಾದ ಸರ್ಕಾರ, ಇಂತಹ ಹೇಳಿಕೆಗಳ ಮೂಲಕ ಜನರನ್ನು ಗೊಂದಲಕ್ಕೆ ದೂಡುತ್ತಿರುವುದು ಸರಿಯಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೇಶದಲ್ಲಿ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ದರ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವುದು ಉದ್ಯಮ ವಲಯದ ನಿದ್ದೆಗೆಡಿಸಿದೆ. ಇದರ ಬೆನ್ನಲ್ಲೇ ರಸಗೊಬ್ಬರ ಕೊರತೆಯ ಮುನ್ಸೂಚನೆ ಕಾಣಿಸಿಕೊಳ್ಳುತ್ತಿದ್ದು, ರೈತರು ಸಂಕಷ್ಟಕ್ಕೆ ಸಿಲುಕುವ ಭೀತಿ ಎದುರಾಗಿದೆ. ಇಂತಹ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ದೇಶದ ಆರ್ಥಿಕತೆಯನ್ನು ಸುಸ್ಥಿತಿಗೆ ತರುವ ಬದಲು, ಜನರ ವೈಯಕ್ತಿಕ ಆಯ್ಕೆಗಳ ಮೇಲೆ ನಿರ್ಬಂಧ ಹೇರುವ ರೀತಿಯಲ್ಲಿ ಮಾತನಾಡುತ್ತಿರುವುದು ಕೇಂದ್ರ ಸರ್ಕಾರದ ಆಡಳಿತ ವೈಫಲ್ಯವನ್ನು ಎತ್ತಿ ತೋರಿಸುತ್ತಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸುವಲ್ಲಿ ಮೋದಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಭಂಡಾರಿ ದೂರಿದ್ದಾರೆ.
ಖಾದ್ಯ ತೈಲ ಮತ್ತು ಚಿನ್ನದ ಬೆಲೆ ಗಗನಕ್ಕೇರುತ್ತಿರುವುದರಿಂದ ಸ್ವರ್ಣೋದ್ಯಮ ಮತ್ತು ಸಾಮಾನ್ಯ ಜನರ ಜೀವನ ತತ್ತರಿಸಿ ಹೋಗಿದೆ. ಈಗಾಗಲೇ ಚಿನ್ನದ ಉದ್ಯಮವು ದರ ಏರಿಕೆಯಿಂದಾಗಿ ಭಾರೀ ನಷ್ಟ ಅನುಭವಿಸುತ್ತಿದ್ದು, ಪ್ರಧಾನಿಯವರ ಇತ್ತೀಚಿನ ಹೇಳಿಕೆಯು ಈ ವಲಯಕ್ಕೆ ಮತ್ತಷ್ಟು ಹೊಡೆತ ನೀಡಲಿದೆ. ಸರ್ಕಾರಿ ವೆಚ್ಚದಲ್ಲಿ ಪದೇ ಪದೇ ವಿದೇಶ ಪ್ರವಾಸಗಳನ್ನು ಕೈಗೊಳ್ಳುವ ಪ್ರಧಾನಿಯವರು, ದೇಶದ ಜನ ಸಾಮಾನ್ಯರಿಗೆ ವಿದೇಶ ಪ್ರವಾಸ ಮಾಡಬೇಡಿ ಎಂದು ಸಲಹೆ ನೀಡುವುದು ವಿಪರ್ಯಾಸದ ಸಂಗತಿಯಾಗಿದೆ. ಈ ರೀತಿಯ ದ್ವಂದ್ವ ನಿಲುವುಗಳು ದೇಶದ ಆರ್ಥಿಕ ಪ್ರಗತಿಗೆ ಮಾರಕವಾಗಲಿವೆ ಎಂದು ಅವರು ಎಚ್ಚರಿಸಿದ್ದಾ
ರೆ.
