ಉಪ್ಪಿನಂಗಡಿ, ಮೇ 22: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಕಾರು ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಸುಮಾರು 70 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಘಟನೆ ಉಪ್ಪಿನಂಗಡಿ ಸಮೀಪದ ಪಂಜಳ ಎಂಬಲ್ಲಿ ಗುರುವಾರ ಸಂಜೆ ನಡೆದಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದರೂ, ಕಾರಿನಲ್ಲಿದ್ದವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅಪಘಾತಕ್ಕೀಡಾದವರು ಪಟ್ಟಮೆ ಗ್ರಾಮದ ದೇರಾಜೆ ನಿವಾಸಿಗಳಾದ ಪ್ರಶಾಂತ್ ದೇರಾಜೆ ಹಾಗೂ ಅವರ ಸಹೋದರ ಪ್ರವೀಣ್ ದೇರಾಜೆ ಎಂದು ಗುರುತಿಸಲಾಗಿದೆ. ಪ್ರಶಾಂತ್ ದೇರಾಜೆ ಅವರು ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯ ಸಂಚಾಲಕರಾಗಿದ್ದಾರೆ ಎಂದು ತಿಳಿದುಬಂದಿದೆ. ಇವರು ಕೊಕ್ಕಡದ ಪಟ್ಟೂರಿನತ್ತ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ಕಾರು ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಿಂದ ಕೆಳಕ್ಕೆ ಉರುಳಿ ನದಿ ಬದಿಯ ಆಳವಾದ ಕಂದಕಕ್ಕೆ ಬಿದ್ದಿದೆ. ಕಾರು ಹಲವು ಅಡಿ ಉರುಳಿದ ಪರಿಣಾಮ ವಾಹನ ಸಂಪೂರ್ಣವಾಗಿ ಜಖಂಗೊಂಡಿದೆ. ಅಪಘಾತದ ಭೀಕರ ದೃಶ್ಯ ಕಂಡ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.
ಘಟನೆಯ ಬಳಿಕ ಸ್ಥಳೀಯರು ಹಾಗೂ ಪರಿಚಿತರು ತಕ್ಷಣ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ಕೈಗೊಂಡರು. ಕಾರಿನಲ್ಲಿದ್ದ ಪ್ರಶಾಂತ್ ದೇರಾಜೆ ಮತ್ತು ಪ್ರವೀಣ್ ದೇರಾಜೆ ಅವರನ್ನು ಸುರಕ್ಷಿತವಾಗಿ ಹೊರತೆಗೆದು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಯಿತು. ಇಬ್ಬರಿಗೂ ಅಲ್ಪಸ್ವಲ್ಪ ತರಚು ಗಾಯಗಳಾಗಿದ್ದು, ಪ್ರಾಣಾಪಾಯ ಇಲ್ಲ ಎಂದು ಮೂಲಗಳು ತಿಳಿಸಿವೆ.
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ಸಾರ್ವಜನಿಕರು ಸ್ಥಳಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದು, ಕೆಲಕಾಲ ರಸ್ತೆ ಸಂಚಾರದಲ್ಲೂ ಅಸ್ತವ್ಯಸ್ತತೆ ಉಂಟಾಯಿತು. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

