ದೇಶದಲ್ಲಿ ಪೆಟ್ರೋಲ್‌, ಡೀಸೆಲ್‌ ಖರೀದಿಗೆ ಯಾವುದೇ ಮಿತಿ ಇಲ್ಲ: ಸಾಕಷ್ಟು ದಾಸ್ತಾನು ಇದೆ ಎಂದ ಕೇಂದ್ರ ಸರ್ಕಾರ

suddilive.com
By -
0

 

petrol-diesel-purchase-no-limit-india-kannada

ನವದೆಹಲಿ, ಮೇ 22: ದೇಶದಲ್ಲಿ ಪೆಟ್ರೋಲ್‌, ಡೀಸೆಲ್‌ ಖರೀದಿಗೆ ಯಾವುದೇ ಮಿತಿ ವಿಧಿಸಲಾಗಿಲ್ಲ ಎಂದು ಕೇಂದ್ರ ಸರ್ಕಾರ ಮತ್ತೊಮ್ಮೆ ಸ್ಪಷ್ಟಪಡಿಸಿದೆ. ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ ಇಲ್ಲದಿರುವುದರಿಂದ ಸಾರ್ವಜನಿಕರು ಆತಂಕಪಡಬೇಕಾದ ಅಗತ್ಯವಿಲ್ಲ ಎಂದು ತಿಳಿಸಿರುವ ಕೇಂದ್ರ ಸರ್ಕಾರ, ಅಕ್ರಮ ದಾಸ್ತಾನು ಹಾಗೂ ಅನಧಿಕೃತ ವಿತರಣೆಯಲ್ಲಿ ತೊಡಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದೆ.


ಇತ್ತೀಚೆಗೆ ಕೆಲವು ರಾಜ್ಯಗಳಲ್ಲಿ ಪೆಟ್ರೋಲ್‌ ಬಂಕ್‌ಗಳು ಪೆಟ್ರೋಲ್‌ ಮತ್ತು ಡೀಸೆಲ್‌ ಖರೀದಿಗೆ ಮಿತಿ ಹೇರಿವೆ ಎಂಬ ವದಂತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದವು. ಜೊತೆಗೆ ತೈಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಬಹುದು ಎಂಬ ವರದಿಗಳೂ ಜನರಲ್ಲಿ ಆತಂಕ ಸೃಷ್ಟಿಸಿತ್ತು. ಈ ಹಿನ್ನೆಲೆಯಲ್ಲಿ ಇಂಡಿಯನ್‌ ಆಯಿಲ್‌ ಸಂಸ್ಥೆ ಸ್ಪಷ್ಟನೆ ನೀಡಿ ದೇಶಾದ್ಯಂತ ಇಂಧನ ಪೂರೈಕೆ ಸುಗಮವಾಗಿದ್ದು ಯಾವುದೇ ಕೊರತೆ ಇಲ್ಲ ಎಂದು ಹೇಳಿತ್ತು. ಇದೀಗ ಕೇಂದ್ರ ಸರ್ಕಾರವೂ ಇದೇ ವಿಷಯವನ್ನು ಪುನರುಚ್ಚರಿಸಿ ಜನರಲ್ಲಿ ವಿಶ್ವಾಸ ಮೂಡಿಸಲು ಮುಂದಾಗಿದೆ.


ಜಂಟಿ ಕಾರ್ಯದರ್ಶಿಗಳ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪೆಟ್ರೋಲಿಯಂ ಸಚಿವಾಲಯದ ಜಂಟಿ ಕಾರ್ಯದರ್ಶಿ ಸುಜಾತಾ ಶರ್ಮಾ, ದೇಶದ ಅವಶ್ಯಕತೆಗಳಿಗೆ ತಕ್ಕಷ್ಟು ಪ್ರಮಾಣದಲ್ಲಿ ಪೆಟ್ರೋಲ್‌, ಡೀಸೆಲ್‌, ಎಲ್‌ಪಿಜಿ ಮತ್ತು ನೈಸರ್ಗಿಕ ಅನಿಲದ ದಾಸ್ತಾನು ಲಭ್ಯವಿದೆ ಎಂದು ಹೇಳಿದರು. ಜಾಗತಿಕ ರಾಜಕೀಯ ಉದ್ವಿಗ್ನತೆ, ಯುದ್ಧ ಪರಿಸ್ಥಿತಿ ಹಾಗೂ ಅಂತರರಾಷ್ಟ್ರೀಯ ಮಾರುಕಟ್ಟೆಯ ಏರುಪೇರುಗಳು ಆಮದುಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದ್ದರೂ ಭಾರತ ತನ್ನ ಇಂಧನ ಭದ್ರತೆಯನ್ನು ಸಮರ್ಥವಾಗಿ ನಿರ್ವಹಿಸುತ್ತಿದೆ ಎಂದು ತಿಳಿಸಿದರು.


ಸಾಮಾನ್ಯ ನಾಗರಿಕರ ಮೇಲೆ ಹೆಚ್ಚುವರಿ ಹೊರೆ ಬಾರದಂತೆ ಸರ್ಕಾರ ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ದೇಶಾದ್ಯಂತ ಹೆಚ್ಚುತ್ತಿರುವ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಎಲ್‌ಪಿಜಿ ಉತ್ಪಾದನೆಯನ್ನು ಹೆಚ್ಚಿಸಲಾಗಿದೆ. ಬಿಕ್ಕಟ್ಟಿನ ಪರಿಸ್ಥಿತಿಯ ನಡುವೆಯೂ ಸುಮಾರು 1.34 ಕೋಟಿ ಎಲ್‌ಪಿಜಿ ಸಿಲಿಂಡರ್‌ಗಳನ್ನು ಯಶಸ್ವಿಯಾಗಿ ವಿತರಿಸಲಾಗಿದೆ ಎಂದು ಸುಜಾತಾ ಶರ್ಮಾ ಮಾಹಿತಿ ನೀಡಿದರು.


ಇದರ ಜೊತೆಗೆ ವಾಣಿಜ್ಯ ಬಳಕೆಯ ಎಲ್‌ಪಿಜಿ ಮಾರಾಟವು 23,588 ಟನ್‌ಗಳಿಗೆ ತಲುಪಿದ್ದು, ನೈಸರ್ಗಿಕ ಅನಿಲ ಸೇವೆಯಲ್ಲಿ 7.99 ಲಕ್ಷ ಹೊಸ ಗ್ರಾಹಕರನ್ನು ನೋಂದಾಯಿಸಲಾಗಿದೆ ಎಂದು ಹೇಳಿದರು. ದೇಶದ ವಿವಿಧ ಭಾಗಗಳಲ್ಲಿ ಇಂಧನ ವಿತರಣೆಯ ಮೇಲ್ವಿಚಾರಣೆಯನ್ನು ಮತ್ತಷ್ಟು ಬಲಪಡಿಸಲಾಗಿದ್ದು, ಅಕ್ರಮ ದಾಸ್ತಾನು, ಕಾಳಬಜಾರಿ ಹಾಗೂ ಅನಧಿಕೃತ ಮಾರಾಟವನ್ನು ತಡೆಯಲು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ತಿಳಿಸಿದರು.


ಅಕ್ರಮ ಚಟುವಟಿಕೆಗಳ ವಿರುದ್ಧ ಈಗಾಗಲೇ ದೇಶದ ವಿವಿಧೆಡೆ ಸುಮಾರು 500 ಸ್ಥಳಗಳಲ್ಲಿ ದಾಳಿ ನಡೆಸಲಾಗಿದೆ. ಈ ವೇಳೆ 111 ಮಂದಿಗೆ ಶೋಕಾಸ್‌ ನೋಟಿಸ್‌ ಜಾರಿಗೊಳಿಸಲಾಗಿದ್ದು, 35 ವಿತರಕರಿಗೆ ಅಧಿಕೃತ ನೋಟಿಸ್‌ ನೀಡಲಾಗಿದೆ. ಅಲ್ಲದೆ ನಿಯಮ ಉಲ್ಲಂಘನೆ ಆರೋಪದಡಿ ಒಬ್ಬ ವಿತರಕನ ಪರವಾನಗಿಯನ್ನು ತಾತ್ಕಾಲಿಕವಾಗಿ ಅಮಾನತು ಮಾಡಲಾಗಿದೆ ಎಂದು ಸುಜಾತಾ ಶರ್ಮಾ ವಿವರಿಸಿದರು.


ಜನರು ವದಂತಿಗಳಿಗೆ ಕಿವಿಗೊಡದೆ ಅಗತ್ಯವಿರುವಷ್ಟು ಮಾತ್ರ ಇಂಧನ ಖರೀದಿಸಬೇಕು ಎಂದು ಕೇಂದ್ರ ಸರ್ಕಾರ ಮನವಿ ಮಾಡಿದೆ. ದೇಶದಲ್ಲಿ ಇಂಧನ ಪೂರೈಕೆ ಸ್ಥಿರವಾಗಿದ್ದು, ಯಾವುದೇ ತುರ್ತು ಪರಿಸ್ಥಿತಿ ಎದುರಾಗಿಲ್ಲ ಎಂದು ಸರ್ಕಾರ ಪುನಃ ಭರವಸೆ ನೀಡಿದೆ.

Tags:

Post a Comment

0 Comments

Post a Comment (0)
3/related/default