ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಮುಂದುವರಿದಿರುವ ಉದ್ವಿಗ್ನ ಪರಿಸ್ಥಿತಿ ಮತ್ತು ಅದರ ಪರಿಣಾಮವಾಗಿ ಜಾಗತಿಕ ಇಂಧನ ಸರಬರಾಜಿನ ಮೇಲೆ ಉಂಟಾಗುತ್ತಿರುವ ಅನಿಶ್ಚಿತತೆಯ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಸಚಿವ ಸಂಪುಟ ಸದಸ್ಯರೊಂದಿಗೆ ನಾಲ್ಕು ಗಂಟೆಗಳಿಗಿಂತ ಹೆಚ್ಚು ಕಾಲ ಮಹತ್ವದ ಸಭೆ ನಡೆಸಿದ್ದಾರೆ. ದೇಶದ ಇಂಧನ ಭದ್ರತೆ, “ವಿಕಸಿತ ಭಾರತ 2047” ಗುರಿ, ಆಡಳಿತ ಸುಧಾರಣೆಗಳು ಹಾಗೂ ವಿವಿಧ ಸಚಿವಾಲಯಗಳ ಕಾರ್ಯಕ್ಷಮತೆ ಕುರಿತು ಈ ಸಭೆಯಲ್ಲಿ ಚರ್ಚೆ ನಡೆದಿದೆ.
ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಈ ಉನ್ನತ ಮಟ್ಟದ ಸಭೆಯಲ್ಲಿ ಸಚಿವ ಸಂಪುಟದ ಸದಸ್ಯರು, ಸ್ವತಂತ್ರ ಪ್ರಭಾರ ಹೊಂದಿರುವ ರಾಜ್ಯ ಸಚಿವರು ಹಾಗೂ ಇತರ ಸಚಿವರು ಭಾಗವಹಿಸಿದ್ದರು. ಜೂನ್ 9ರಂದು ಮೋದಿ ಸರ್ಕಾರದ ಮೂರನೇ ಅವಧಿಯ ಎರಡನೇ ವರ್ಷದ ಪೂರ್ಣತೆಗೆ ಮುನ್ನ ಸರ್ಕಾರದ ಕಾರ್ಯಚಟುವಟಿಕೆಗಳನ್ನು ಪರಿಶೀಲಿಸುವ ಉದ್ದೇಶದಿಂದ ಸಭೆ ಕರೆಯಲಾಗಿತ್ತು ಎಂದು ಮೂಲಗಳು ತಿಳಿಸಿವೆ.
ಇಂಧನ ಭದ್ರತೆ ಕುರಿತು ವಿಶೇಷ ಒತ್ತು
ಪಶ್ಚಿಮ ಏಷ್ಯಾದ ಯುದ್ಧ ಪರಿಸ್ಥಿತಿಯಿಂದ ಹಾರ್ಮುಜ್ ಜಲಸಂಧಿಯಲ್ಲಿ ಉಂಟಾಗಿರುವ ತೀವ್ರ ಉದ್ವಿಗ್ನತೆಯ ಪರಿಣಾಮವಾಗಿ ಜಾಗತಿಕ ತೈಲ ಹಾಗೂ ಅನಿಲ ಸರಬರಾಜಿನ ಮೇಲೆ ಒತ್ತಡ ನಿರ್ಮಾಣವಾಗಿದೆ. ಈ ಹಿನ್ನೆಲೆ ಭಾರತವು ಪರ್ಯಾಯ ಇಂಧನ ಮೂಲಗಳತ್ತ ಹೆಚ್ಚಿನ ಗಮನ ಹರಿಸಬೇಕಾಗಿದೆ ಎಂದು ಪ್ರಧಾನಿ ಮೋದಿ ಸೂಚಿಸಿದ್ದಾರೆ. ವಿಶೇಷವಾಗಿ ಬಯೋಗ್ಯಾಸ್, ಹಸಿರು ಇಂಧನ, ನವೀಕರಿಸಬಹುದಾದ ಶಕ್ತಿ ಮೂಲಗಳು ಮತ್ತು ಗ್ರೀನ್ ಹೈಡ್ರೋಜನ್ ಬಳಕೆಯನ್ನು ವಿಸ್ತರಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆದಿರುವ ಮಾಹಿತಿ ಲಭ್ಯವಾಗಿದೆ.
ಭಾರತವು ತನ್ನ ಇಂಧನ ಅವಲಂಬನೆಯನ್ನು ಕಡಿಮೆ ಮಾಡಲು ಹಲವು ಕ್ರಮಗಳನ್ನು ಈಗಾಗಲೇ ಕೈಗೊಂಡಿದ್ದು, ಎಲ್ಎನ್ಜಿ ಹಾಗೂ ಎಲ್ಪಿಜಿ ಸರಬರಾಜಿಗೆ ಹೊಸ ದೇಶಗಳೊಂದಿಗೆ ಒಪ್ಪಂದಗಳನ್ನು ಮಾಡುತ್ತಿದೆ. ತೈಲ ಆಮದು ಅವಲಂಬನೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಸೌರಶಕ್ತಿ, ಗಾಳಿ ಶಕ್ತಿ ಮತ್ತು ಹಸಿರು ತಂತ್ರಜ್ಞಾನಗಳ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ.
“ವಿಕಸಿತ ಭಾರತ” ಕೇವಲ ಘೋಷಣೆ ಅಲ್ಲ
ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, “ವಿಕಸಿತ ಭಾರತ 2047” ಎಂಬುದು ಕೇವಲ ರಾಜಕೀಯ ಘೋಷಣೆ ಅಲ್ಲ, ಅದು ಸರ್ಕಾರದ ಬದ್ಧತೆ ಎಂದು ಸಚಿವರಿಗೆ ತಿಳಿಸಿದ್ದಾರೆ. ಜನರಿಗೆ ವೇಗವಾಗಿ ಸೇವೆ ತಲುಪಿಸುವುದು, ಆಡಳಿತದಲ್ಲಿ ಪಾರದರ್ಶಕತೆ ತರುವುದು ಅತ್ಯಗತ್ಯ ಎಂದು ಅವರು ಹೇಳಿದ್ದಾರೆ.
ಅದೇ ವೇಳೆ, ಯಾವುದೇ ಯೋಜನೆಗಳು ವಿಳಂಬವಾಗದಂತೆ ನೋಡಿಕೊಳ್ಳಬೇಕು ಮತ್ತು ಜನಸಾಮಾನ್ಯರಿಗೆ ಸರ್ಕಾರದ ಯೋಜನೆಗಳ ಫಲಿತಾಂಶ ತ್ವರಿತವಾಗಿ ತಲುಪಬೇಕು ಎಂದು ಮೋದಿ ಸೂಚನೆ ನೀಡಿದ್ದಾರೆ. “Minimum Interference, Maximum Support” ಎಂಬ ಆಡಳಿತ ಮಾದರಿಯನ್ನೇ ಮುಂದುವರಿಸಲು ಸರ್ಕಾರ ಬದ್ಧವಾಗಿದೆ ಎಂದು ಸಭೆಯಲ್ಲಿ ಪುನರುಚ್ಚರಿಸಲಾಗಿದೆ.
ಜಾಗತಿಕ ಯುದ್ಧದ ಪರಿಣಾಮದ ಬಗ್ಗೆ ಎಚ್ಚರಿಕೆ
ಇತ್ತೀಚಿನ ದಿನಗಳಲ್ಲಿ ಪಶ್ಚಿಮ ಏಷ್ಯಾದ ಸಂಘರ್ಷದ ಬಗ್ಗೆ ಪ್ರಧಾನಿ ಮೋದಿ ಹಲವು ಬಾರಿ ಆತಂಕ ವ್ಯಕ್ತಪಡಿಸಿದ್ದಾರೆ. ಈ ಯುದ್ಧದ ಪರಿಣಾಮಗಳು ದೀರ್ಘಕಾಲ ಉಳಿಯುವ ಸಾಧ್ಯತೆ ಇದೆ ಎಂದು ಅವರು ಈಗಾಗಲೇ ಸಂಸತ್ತಿನಲ್ಲಿ ಎಚ್ಚರಿಸಿದ್ದರು. ತೈಲ ಬೆಲೆ ಏರಿಕೆ, ಸರಕು ಸಾಗಣೆ ವೆಚ್ಚ ಹೆಚ್ಚಳ ಮತ್ತು ದರ ಏರಿಕೆ ಮುಂತಾದ ಸವಾಲುಗಳಿಗೆ ದೇಶ ಸಿದ್ಧರಾಗಬೇಕು ಎಂದು ಪ್ರಧಾನಿ ಹೇಳಿದ್ದಾರೆ.
ವಿವಿಧ ಕ್ಷೇತ್ರಗಳ ಪರಿಶೀಲನೆ
ಈ ಸಭೆಯಲ್ಲಿ ಆರ್ಥಿಕತೆ, ಕೃಷಿ, ಕಾರ್ಮಿಕ, ಇಂಧನ, ಮೂಲಸೌಕರ್ಯ ಸೇರಿದಂತೆ ಒಟ್ಟು ಒಂಬತ್ತು ಪ್ರಮುಖ ಕ್ಷೇತ್ರಗಳ ಕಾರ್ಯಕ್ಷಮತೆಯನ್ನು ಪ್ರಧಾನಿ ಪರಿಶೀಲಿಸಿದ್ದಾರೆ. ಮುಂದಿನ ದಿನಗಳಲ್ಲಿ ಆಡಳಿತ ಸುಧಾರಣೆಗಳಿಗೆ ವೇಗ ನೀಡುವುದು, ಹೊಸ ಹೂಡಿಕೆಗಳನ್ನು ಆಕರ್ಷಿಸುವುದು ಹಾಗೂ ದೇಶದ ಆರ್ಥಿಕ ಬೆಳವಣಿಗೆಯನ್ನು ವೇಗಗೊಳಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿರಲಿದೆ ಎಂದು ಮೂಲಗಳು ತಿಳಿಸಿವೆ.
ವರದಿ: www.suddilive.com

