ಪುತ್ತೂರು ಮೂಲದ ವಿಶ್ವಕರ್ಮ ಸಮಾಜದ ಬಡ ಕುಟುಂಬದ ಯುವತಿಗೆ ಪ್ರೇಮ ವಿವಾಹದ ಆಮಿಷವೊಡ್ಡಿ ಗರ್ಭವತಿಯನ್ನಾಗಿ ಮಾಡಿ ವಂಚನೆ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡನ ಪುತ್ರ ಕೃಷ್ಣ ಜೆ. ರಾವ್ ವಿರುದ್ಧ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ ಆದೇಶವನ್ನೇ ಆರೋಪಿ ಧಿಕ್ಕರಿಸಿದ್ದಾರೆ ಎಂದು ಮಹಾಸಭಾ ಆರೋಪಿಸಿದೆ.
ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ರಾಜ್ಯಾಧ್ಯಕ್ಷ ಕೆ.ಪಿ. ನಂಜುಂಡಿ ಅವರು, ಸಮುದಾಯದ ಬಡ ಯುವತಿಗೆ ಮದುವೆಯ ಭರವಸೆ ನೀಡಿ ಕೃಷ್ಣ ಜೆ. ರಾವ್ ಹಲವು ವರ್ಷಗಳಿಂದ ಸಂಪರ್ಕದಲ್ಲಿದ್ದು, ಬಳಿಕ ಆಕೆಯನ್ನು ಗರ್ಭವತಿಯಾಗುವಂತೆ ಮಾಡಿ ವಂಚಿಸಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು. ಈ ಸಂಬಂಧ ಈಗಾಗಲೇ ನ್ಯಾಯಾಲಯದ ಮೆಟ್ಟಿಲೇರಿರುವ ಸಂತ್ರಸ್ತೆಗೆ ನ್ಯಾಯ ಸಿಗಬೇಕೆಂಬ ಉದ್ದೇಶದಿಂದ ಮಹಾಸಭಾ ಹೋರಾಟ ನಡೆಸುತ್ತಿದೆ ಎಂದು ಹೇಳಿದರು.
ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ಕಳೆದ ಏಪ್ರಿಲ್ 24ರಂದು ಆರೋಪಿಗೆ ಮಧ್ಯಾಂತರ ತಡೆ ನೀಡಿದ ವೇಳೆ ಕೆಲವು ಕಟ್ಟುನಿಟ್ಟಿನ ಷರತ್ತುಗಳನ್ನು ವಿಧಿಸಿತ್ತು. ಅಂತಿಮ ತೀರ್ಪು ಹೊರಬರುವವರೆಗೆ ಸಂತ್ರಸ್ತೆ ಯುವತಿ ಹಾಗೂ ಆಕೆಯ ಮಗುವಿನ ನಿರ್ವಹಣೆಗೆ ಪ್ರತಿ ತಿಂಗಳು ಒಟ್ಟು 75 ಸಾವಿರ ರೂಪಾಯಿ ನೀಡಬೇಕೆಂದು ನ್ಯಾಯಾಲಯ ಆದೇಶಿಸಿತ್ತು ಎಂದು ನಂಜುಂಡಿ ವಿವರಿಸಿದರು.
ಆದರೆ ನ್ಯಾಯಾಲಯದ ಸ್ಪಷ್ಟ ಆದೇಶವಿದ್ದರೂ ಮೇ 1ರಂದು ನೀಡಬೇಕಿದ್ದ 75 ಸಾವಿರ ರೂಪಾಯಿ ಹಣವನ್ನು ಇಂದಿಗೂ ಪಾವತಿಸಿಲ್ಲ. ಇದರಿಂದ ಆರೋಪಿ ನೇರವಾಗಿ ಹೈಕೋರ್ಟ್ ಆದೇಶವನ್ನೇ ಅವಮಾನಿಸಿರುವುದು ಸ್ಪಷ್ಟವಾಗಿದೆ ಎಂದು ಅವರು ಆರೋಪಿಸಿದರು. ನ್ಯಾಯಾಲಯದ ಆದೇಶ ಪಾಲಿಸದಿದ್ದರೆ ಮುಂದಿನ ದಿನಗಳಲ್ಲಿ ಕಾನೂನು ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸಂತ್ರಸ್ತೆ ಯುವತಿ ಹಾಗೂ ಮಗುವಿಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ರಾಜ್ಯದ ವಿಶ್ವಕರ್ಮ ಸಮುದಾಯ ಒಗ್ಗಟ್ಟಿನಿಂದ ಹೋರಾಟ ನಡೆಸಲಿದೆ. ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಸಂತ್ರಸ್ತೆಗೆ ರಕ್ಷಣೆ ಹಾಗೂ ನ್ಯಾಯ ಒದಗಿಸಬೇಕು ಎಂದು ಮಹಾಸಭಾ ಒತ್ತಾಯಿಸಿತು.
ಸುದ್ದಿಗೋಷ್ಠಿಯಲ್ಲಿ ಶ್ರೀ ನೀಲಕಂಠ ಸ್ವಾಮೀಜಿ, ಶ್ರೀ ದೊಡ್ಡೆಂದ್ರ ಸ್ವಾಮೀಜಿ, ಶ್ರೀ ಗಣೇಶ ಸ್ವಾಮೀಜಿ, ಆರ್. ಪ್ರಸನ್ನ ಕುಮಾರ್, ಜಿ. ರವಿಕುಮಾರ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
