ನವದೆಹಲಿ/ರಾಯ್ಬರೇಲಿ: ದೇಶದ ಜನರಿಗೆ ವಿದೇಶ ಪ್ರವಾಸಗಳನ್ನು ಕಡಿಮೆ ಮಾಡುವಂತೆ ಕರೆ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರೇ ನಿರಂತರವಾಗಿ ವಿದೇಶ ಪ್ರವಾಸ ಕೈಗೊಳ್ಳುತ್ತಿರುವುದು ವಿಪರ್ಯಾಸ ಎಂದು ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ Rahul Gandhi ತೀವ್ರ ವಾಗ್ದಾಳಿ ನಡೆಸಿದ್ದಾರೆ. ಉತ್ತರ ಪ್ರದೇಶದ ರಾಯ್ಬರೇಲಿಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳ ವಿರುದ್ಧ ಕಿಡಿಕಾರಿದರು.
ಮುಂದಿನ ದಿನಗಳಲ್ಲಿ ದೇಶವು ಭಾರೀ ಆರ್ಥಿಕ ಸಂಕಷ್ಟವನ್ನು ಎದುರಿಸಬೇಕಾಗಬಹುದು ಎಂದು ಎಚ್ಚರಿಕೆ ನೀಡಿದ ರಾಹುಲ್ ಗಾಂಧಿ, ಅದರ ನೇರ ಹೊರೆ ಸಾಮಾನ್ಯ ಜನರ ಮೇಲೇ ಬೀಳಲಿದೆ ಎಂದು ಹೇಳಿದರು. “ಈ ಆರ್ಥಿಕ ಆಘಾತದಿಂದ ಅದಾನಿ, ಅಂಬಾನಿ ಅಥವಾ ಪ್ರಧಾನಿ ಮೋದಿ ಅವರಿಗೆ ಯಾವುದೇ ತೊಂದರೆ ಆಗುವುದಿಲ್ಲ. ಆದರೆ ಯುವಕರು, ಕಾರ್ಮಿಕರು, ರೈತರು ಹಾಗೂ ಸಣ್ಣ ವ್ಯಾಪಾರಿಗಳು ದೊಡ್ಡ ಸಂಕಷ್ಟಕ್ಕೆ ಸಿಲುಕಲಿದ್ದಾರೆ” ಎಂದು ಆತಂಕ ವ್ಯಕ್ತಪಡಿಸಿದರು.
ಪ್ರಧಾನಿ ಮೋದಿ ಜನರಿಗೆ “ಚಿನ್ನ ಖರೀದಿಸಬೇಡಿ, ಎಣ್ಣೆ ಕಡಿಮೆ ಬಳಸಿ, ವಿದೇಶ ಪ್ರವಾಸ ತಪ್ಪಿಸಿ” ಎಂದು ಸಲಹೆ ನೀಡುತ್ತಾರೆ. ಆದರೆ ಅವರೇ ಒಂದೇ ತಿಂಗಳಲ್ಲಿ ಜಪಾನ್, ನಾರ್ವೆ ಸೇರಿದಂತೆ ಹಲವು ರಾಷ್ಟ್ರಗಳಿಗೆ ಭೇಟಿ ನೀಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದ ಅವರು, ಸರ್ಕಾರದ ಮಾತು ಮತ್ತು ಕೃತ್ಯಗಳಲ್ಲಿ ದೊಡ್ಡ ವ್ಯತ್ಯಾಸ ಇದೆ ಎಂದು ಆರೋಪಿಸಿದರು.
ದೇಶದಲ್ಲಿ ಹಣದುಬ್ಬರ ನಿರಂತರ ಏರಿಕೆಯಾಗುತ್ತಿದ್ದು, ಅಗತ್ಯ ವಸ್ತುಗಳ ಬೆಲೆ ನಿಯಂತ್ರಣ ತಪ್ಪಿದೆ ಎಂದು ರಾಹುಲ್ ಗಾಂಧಿ ಹೇಳಿದರು. “ಮೋದಿ ನೇತೃತ್ವದ ಸರ್ಕಾರ ಇರುವವರೆಗೂ ಬೆಲೆ ಏರಿಕೆ ನಿಲ್ಲುವುದಿಲ್ಲ. ಸಾಮಾನ್ಯ ಜನರ ಸಮಸ್ಯೆಗಳಿಗೆ ಪರಿಹಾರ ಹುಡುಕುವ ಬದಲು ಸರ್ಕಾರ ಉದ್ಯಮಿಗಳ ಹಿತಾಸಕ್ತಿಗೆ ಆದ್ಯತೆ ನೀಡುತ್ತಿದೆ” ಎಂದು ಟೀಕಿಸಿದರು.
ಬಿಜೆಪಿ ನಾಯಕರು ತಮ್ಮ ವಿರುದ್ಧ “ಏನೂ ಗೊತ್ತಿಲ್ಲ” ಎಂದು ಟೀಕೆ ಮಾಡುತ್ತಾರೆ. ಆದರೆ ದೇಶದ ಆರ್ಥಿಕ ಪರಿಸ್ಥಿತಿ ಕುರಿತು ಎಚ್ಚರಿಕೆ ನೀಡಿದಾಗ ಅದನ್ನು ಗಂಭೀರವಾಗಿ ಪರಿಗಣಿಸುವ ಬದಲು ವಿದೇಶ ಪ್ರವಾಸ ಮತ್ತು ಉದ್ಯಮಿಗಳ ಸಹಾಯದಲ್ಲೇ ಸರ್ಕಾರ ನಿರತರಾಗಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದರು.
ಸಾಮಾನ್ಯ ಜನರ ಜೀವನ ದಿನದಿಂದ ದಿನಕ್ಕೆ ಕಷ್ಟಕರವಾಗುತ್ತಿದ್ದು, ಉದ್ಯೋಗ ಸಮಸ್ಯೆ, ಬೆಲೆ ಏರಿಕೆ ಮತ್ತು ಆರ್ಥಿಕ ಅನಿಶ್ಚಿತತೆ ದೇಶದ ಯುವಜನತೆಯನ್ನು ಆತಂಕಕ್ಕೀಡು ಮಾಡುತ್ತಿದೆ ಎಂದು ಅವರು ಹೇಳಿದರು. ಕೇಂದ್ರ ಸರ್ಕಾರ ತಕ್ಷಣವೇ ಜನಪರ ಆರ್ಥಿಕ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
