ತುಮಕೂರು: ಕರ್ನಾಟಕ ಸರ್ಕಾರದ ಮೂರನೇ ವರ್ಷದ ಸಂಭ್ರಮಾಚರಣೆಯ ಅಂಗವಾಗಿ ತುಮಕೂರು ನಗರದಲ್ಲಿ ಆಯೋಜಿಸಲಾದ ಬೃಹತ್ ಸಾಧನಾ ಸಮಾವೇಶ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯಿತು. ಲಕ್ಷಾಂತರ ಸಾರ್ವಜನಿಕರ ಸಮ್ಮುಖದಲ್ಲಿ ನಡೆದ ಈ ಮಹಾಸಮಾವೇಶವು ಜನಸಾಗರದಿಂದ ಕಂಗೊಳಿಸಿದ್ದು, ಸರ್ಕಾರದ ವಿವಿಧ ಜನಕಲ್ಯಾಣ ಯೋಜನೆಗಳ ಸೌಲಭ್ಯ ವಿತರಣೆ ಮೂಲಕ ವಿಶೇಷ ಗಮನ ಸೆಳೆಯಿತು. ರಾಜ್ಯ ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಈ ಕಾರ್ಯಕ್ರಮದಲ್ಲಿ ಉತ್ಸಾಹಭರಿತ ವಾತಾವರಣ ನಿರ್ಮಾಣವಾಗಿತ್ತು.
ಈ ಸಮಾರಂಭದ ಪ್ರಮುಖ ಆಕರ್ಷಣೆಯಾಗಿ ತುಮಕೂರು ಜಿಲ್ಲೆ ಗಿನ್ನಿಸ್ ವರ್ಲ್ಡ್ ರೆಕಾರ್ಡ್ಸ್ ಪಟ್ಟಿಗೆ ಸೇರುವ ಮೂಲಕ ಜಾಗತಿಕ ಮಟ್ಟದಲ್ಲಿ ಹೊಸ ಇತಿಹಾಸ ನಿರ್ಮಿಸಿತು. ತಂತ್ರಜ್ಞಾನ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಬಳಸಿ ಅತಿ ಕಡಿಮೆ ಅವಧಿಯಲ್ಲಿ ಬರೋಬ್ಬರಿ 21,529 ಹಕ್ಕುಪತ್ರಗಳನ್ನು ಯಶಸ್ವಿಯಾಗಿ ಅಪ್ಲೋಡ್ ಮಾಡುವ ಮೂಲಕ ಜಿಲ್ಲಾಡಳಿತವು ವಿಶ್ವದಾಖಲೆ ಸಾಧನೆ ಮಾಡಿದೆ. ಈ ಸಾಧನೆಯ ಮೂಲಕ ತುಮಕೂರು ಜಿಲ್ಲೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕದ ಹೆಮ್ಮೆಯನ್ನು ಮತ್ತಷ್ಟು ಹೆಚ್ಚಿಸಿದೆ.
ಸಮಾವೇಶದ ವೇದಿಕೆಯಲ್ಲಿ ಗಿನ್ನಿಸ್ ವರ್ಲ್ಡ್ ರೆಕಾರ್ಡ್ಸ್ ಸಂಸ್ಥೆಯ ಅಧಿಕೃತ ಪ್ರತಿನಿಧಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಾಗತಿಕ ಪ್ರಮಾಣಪತ್ರವನ್ನು ಅಧಿಕೃತವಾಗಿ ಹಸ್ತಾಂತರಿಸಿದರು. ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಗೌರವವನ್ನು ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರಿಗೆ ನೀಡುವ ಮೂಲಕ ಇಡೀ ಜಿಲ್ಲಾಡಳಿತದ ಶ್ರಮ, ತಂತ್ರಜ್ಞಾನ ಬಳಕೆ ಮತ್ತು ಸಮನ್ವಯ ಕಾರ್ಯವನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ಅಧಿಕಾರಿಗಳ ಪರಿಶ್ರಮದಿಂದಲೇ ಈ ಐತಿಹಾಸಿಕ ಸಾಧನೆ ಸಾಧ್ಯವಾಗಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಮಹಾಸಮಾವೇಶದಲ್ಲಿ ಒಟ್ಟಾರೆಯಾಗಿ 1.52 ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ವಿವಿಧ ಯೋಜನೆಗಳ ಹಕ್ಕುಪತ್ರಗಳು ಹಾಗೂ ಸೌಲಭ್ಯಗಳನ್ನು ವಿತರಿಸಲಾಯಿತು. ಸರ್ಕಾರದ ಜನಪರ ಯೋಜನೆಗಳನ್ನು ನೇರವಾಗಿ ಜನರಿಗೆ ತಲುಪಿಸುವ ಕಾರ್ಯದಲ್ಲಿ ಈ ಕಾರ್ಯಕ್ರಮ ಮಹತ್ವದ ಮೈಲಿಗಲ್ಲಾಗಿದೆ ಎಂದು ಸರ್ಕಾರ ತಿಳಿಸಿದೆ. ರಾಜ್ಯದ ಅಭಿವೃದ್ಧಿ ಮತ್ತು ಡಿಜಿಟಲ್ ಆಡಳಿತ ವ್ಯವಸ್ಥೆಯ ಪರಿಣಾಮಕಾರಿತ್ವವನ್ನು ಜಗತ್ತಿಗೆ ತೋರಿಸುವಂತ ಕಾರ್ಯಕ್ರಮ ಇದಾಗಿದ್ದು, ತುಮಕೂರು ನಗರವು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯಿತು.
