ಉಡುಪಿ: ಜಿಲ್ಲಾ ಸಶಸ್ತ್ರ ಮೀಸಲು ಪಡೆ (ಡಿಎಆರ್) ವಿಭಾಗದಲ್ಲಿ ಸಹಾಯಕ ಮೀಸಲು ಉಪನಿರೀಕ್ಷಕರಾಗಿ (ಎಆರ್ಎಸ್ಐ) ಸೇವೆ ಸಲ್ಲಿಸುತ್ತಿದ್ದ ನಾಗೇಶ್ ಎಂ. (52) ಅವರು ಕ್ಯಾನ್ಸರ್ ಕಾಯಿಲೆಯಿಂದ ಗುರುವಾರ ನಿಧನರಾದರು. ಕಳೆದ ಒಂದು ವರ್ಷದಿಂದ ಈ ಭೀಕರ ಕಾಯಿಲೆಯೊಂದಿಗೆ ಹೋರಾಡುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಇಹಲೋಕ ತ್ಯಜಿಸಿದ್ದಾರೆ.
ಮೂಲತಃ ಮಂಗಳೂರಿನ ಕಿನ್ನಿಗೋಳಿ ಸಮೀಪದ ಪದ್ಮನೂರಿನವರಾದ ನಾಗೇಶ್ ಅವರು 1996ರ ಅಕ್ಟೋಬರ್ 10ರಂದು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಡಿಎಆರ್ ಘಟಕದಲ್ಲಿ ಪೊಲೀಸ್ ಸೇವೆಗೆ ಸೇರ್ಪಡೆಯಾಗಿದ್ದರು. 1997ರಲ್ಲಿ ಉಡುಪಿ ಪ್ರತ್ಯೇಕ ಜಿಲ್ಲೆಯಾಗಿ ರಚನೆಯಾದ ಸಂದರ್ಭದಲ್ಲಿ ಅವರು ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಗೆ ವರ್ಗಾವಣೆಗೊಂಡಿದ್ದರು. ಅಂದಿನಿಂದ ಸುಮಾರು ಎರಡೂವರೆ ದಶಕಗಳ ಕಾಲ ಉಡುಪಿ ಜಿಲ್ಲೆಯಲ್ಲಿ ವಿವಿಧ ಜವಾಬ್ದಾರಿಗಳನ್ನು ನಿಭಾಯಿಸಿದ್ದರು.
ತಮ್ಮ ಪ್ರಾಮಾಣಿಕತೆ ಹಾಗೂ ಶಿಸ್ತಿನ ಸಿಪಾಯಿಯಂತೆ ಕರ್ತವ್ಯ ನಿರ್ವಹಿಸುತ್ತಿದ್ದ ಇವರು, ಇಲಾಖೆಯಲ್ಲಿ ಉತ್ತಮ ಹೆಸರನ್ನು ಗಳಿಸಿದ್ದರು. ಇವರ ಸೇವೆಯನ್ನು ಪರಿಗಣಿಸಿ 2016ರ ಡಿಸೆಂಬರ್ 17ರಂದು ಎಆರ್ಎಸ್ಐ ಆಗಿ ಪದೋನ್ನತಿ ನೀಡಲಾಗಿತ್ತು.
ನಾಗೇಶ್ ಅವರ ಅಕಾಲಿಕ ನಿಧನಕ್ಕೆ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳು ಹಾಗೂ ಸಹೋದ್ಯೋಗಿಗಳು ತೀವ್ರ ಸಂತಾಪ ಸೂಚಿಸಿದ್ದಾರೆ. ಒಬ್ಬ ದಕ್ಷ ಅಧಿಕಾರಿಯನ್ನು ಕಳೆದುಕೊಂಡಂತಾಗಿದೆ ಎಂದು ಇಲಾಖೆಯ ಪ್ರಮುಖರು ಕಂಬನಿ ಮಿಡಿದಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಒಳಗೊಂಡಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯು ಅವರ ಸ್ವಗ್ರಾಮದಲ್ಲಿ ಜರುಗಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
