ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ (UDA) ಮೇಲೆ ಲೋಕಾಯುಕ್ತ ದಿಢೀರ್ ದಾಳಿ: 200ಕ್ಕೂ ಹೆಚ್ಚು ಪ್ರಮುಖ ಕಡತಗಳು ವಶಕ್ಕೆ!

suddilive.com
By -
0

 


ಉಡುಪಿ, ಮೇ 29: ಸಾರ್ವಜನಿಕರಿಂದ ಬಂದಿದ್ದ ಅನೇಕ ದೂರುಗಳ ಆಧಾರದ ಮೇಲೆ ಉಡುಪಿ ಲೋಕಾಯುಕ್ತ ಪೊಲೀಸರು ಶುಕ್ರವಾರ ಆದಿ ಉಡುಪಿಯಲ್ಲಿರುವ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ (ಯುಡಿಎ) ಕಚೇರಿಯ ವಿವಿಧ ಶಾಖೆಗಳ ಮೇಲೆ ದಿಢೀರ್ ದಾಳಿ ನಡೆಸಿ ಮಹತ್ವದ ದಾಖಲೆಗಳು ಹಾಗೂ ಕಡತಗಳ ಪರಿಶೀಲನೆ ನಡೆಸಿದರು. ಈ ಕಾರ್ಯಾಚರಣೆ ಕಚೇರಿಯ ಆಡಳಿತಾತ್ಮಕ ಕಾರ್ಯವೈಖರಿ, ಕಡತಗಳ ವಿಲೇವಾರಿ ಪ್ರಕ್ರಿಯೆ ಹಾಗೂ ಸಾರ್ವಜನಿಕ ಅರ್ಜಿಗಳ ನಿರ್ವಹಣೆ ಕುರಿತಂತೆ ನಡೆದಿರುವ ಅಕ್ರಮಗಳ ಬಗ್ಗೆ ತನಿಖೆ ನಡೆಸುವ ಉದ್ದೇಶದಿಂದ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.


ಕರ್ನಾಟಕ ಲೋಕಾಯುಕ್ತದ ಬೆಂಗಳೂರು ಕೇಂದ್ರ ಕಚೇರಿಯಿಂದ ವಿಶೇಷ ಶೋಧನಾ ವಾರಂಟ್ ಪಡೆದು ಈ ಕಾರ್ಯಾಚರಣೆ ನಡೆಸಲಾಗಿದ್ದು, ಒಂದು ದಿನದ ಕಾರ್ಯಾಚರಣೆಗೆ ಸೀಮಿತವಾಗದೇ ಶನಿವಾರವೂ ಪರಿಶೀಲನೆ ಮುಂದುವರಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಾಳಿಯ ವೇಳೆ ವಿವಿಧ ವಿಭಾಗಗಳಲ್ಲಿ ಸಂಗ್ರಹವಾಗಿದ್ದ ದಾಖಲೆಗಳು, ಅರ್ಜಿಗಳು ಹಾಗೂ ಅನುಮೋದನಾ ಪ್ರಕ್ರಿಯೆಗೆ ಸಂಬಂಧಿಸಿದ ಕಡತಗಳನ್ನು ಪರಿಶೀಲಿಸಲಾಯಿತು.


ಮಂಗಳೂರು ಲೋಕಾಯುಕ್ತ ಪೊಲೀಸ್ ಅಧೀಕ್ಷಕ (ಎಸ್‌ಪಿ) ದಿನೇಶ್‌ಕುಮಾರ್ ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಾಚರಣೆಗೆ ಉಡುಪಿ ಲೋಕಾಯುಕ್ತ ಡಿವೈಎಸ್ಪಿ ಹಾಲಮೂರ್ತಿ ರಾವ್ ನೇತೃತ್ವ ವಹಿಸಿದ್ದರು. ಪೊಲೀಸ್ ಇನ್‌ಸ್ಪೆಕ್ಟರ್ ರಾಜೇಂದ್ರ ನಾಯ್ಕ್, ಮಂಗಳೂರು ಲೋಕಾಯುಕ್ತ ಇನ್‌ಸ್ಪೆಕ್ಟರ್ ಭಾರತಿ ಸೇರಿದಂತೆ ಹಲವು ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.


ದಾಳಿಯ ಸಂದರ್ಭದಲ್ಲಿ ಕಚೇರಿಯಲ್ಲಿ ವಿಲೇವಾರಿಗೆ ಬಾಕಿ ಉಳಿದಿದ್ದ ಹಲವಾರು ಪ್ರಮುಖ ಕಡತಗಳು ಪತ್ತೆಯಾಗಿವೆ. ಅಲ್ಲದೆ ನಿಯಮಬಾಹಿರವಾಗಿ ಹಾಗೂ ಕಾನೂನು ಪ್ರಕ್ರಿಯೆ ಉಲ್ಲಂಘಿಸಿ ವಿಲೇವಾರಿ ಮಾಡಲಾಗಿದೆ ಎನ್ನಲಾದ ಕೆಲವು ಕಡತಗಳೂ ಅಧಿಕಾರಿಗಳ ಗಮನಕ್ಕೆ ಬಂದಿವೆ. ಪರಿಶೀಲನೆಯ ವೇಳೆ ಸುಮಾರು 200ಕ್ಕೂ ಹೆಚ್ಚು ಮಹತ್ವದ ದಾಖಲೆಗಳು ಮತ್ತು ಕಡತಗಳನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.


ನಗರಾಭಿವೃದ್ಧಿ ಪ್ರಾಧಿಕಾರದ ಕಾರ್ಯವೈಖರಿಯಲ್ಲಿ ಕಂಡುಬಂದಿರುವ ಲೋಪಗಳು, ಕಡತಗಳ ವಿಳಂಬ ವಿಲೇವಾರಿ ಹಾಗೂ ನಿಯಮ ಉಲ್ಲಂಘನೆಗಳ ಕುರಿತು ಸಮಗ್ರ ತನಿಖೆ ನಡೆಸಲಾಗುವುದು. ದಾಖಲೆಗಳ ಪರಿಶೀಲನೆ ಪೂರ್ಣಗೊಂಡ ಬಳಿಕ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಕುರಿತು ವಿವರವಾದ ವರದಿಯನ್ನು ಕರ್ನಾಟಕ ಲೋಕಾಯುಕ್ತದ ಬೆಂಗಳೂರು ಕಚೇರಿಗೆ ಸಲ್ಲಿಸಲಾಗುವುದು ಎಂದು ಡಿವೈಎಸ್ಪಿ ಹಾಲಮೂರ್ತಿ ರಾವ್ ತಿಳಿಸಿದ್ದಾರೆ.


ಈ ದಾಳಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಆಡಳಿತಾತ್ಮಕ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ಜವಾಬ್ದಾರಿತನದ ಪ್ರಶ್ನೆಗಳನ್ನು ಮತ್ತೆ ಮುನ್ನೆಲೆಗೆ ತಂದಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಮಹತ್ವದ ಮಾಹಿತಿಗಳು ಬಹಿರಂಗವಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಲೋಕಾಯುಕ್ತ ಅಧಿಕಾರಿಗಳ ತನಿಖೆ ಮುಂದುವರಿದಿರುವುದರಿಂದ ಪ್ರಕರಣಕ್ಕೆ ಸಂಬಂಧಿಸಿದ ಹೆಚ್ಚಿನ ವಿವರಗಳು ಮುಂದಿನ ದಿನಗಳಲ್ಲಿ ಹೊರಬರುವ ನಿರೀಕ್ಷೆಯಿದೆ.

Tags:

Post a Comment

0 Comments

Post a Comment (0)
3/related/default