ಉಪ್ಪಿನಂಗಡಿ ಬಳಿ ಕಾರು-ಬೈಕ್ ಭೀಕರ ಅಪಘಾತ: ಸಹಕಾರ ಸಂಘದ ಸಿಬ್ಬಂದಿ ಸಾವು

KARNATAKA NEWS LIVE
By -
0

 

uppinangady-golithottu-bike-car-accident-sadananda-acharya-death

ಉಪ್ಪಿನಂಗಡಿ ಸಮೀಪದ ಗೋಳಿತ್ತೊಟ್ಟು ಜಂಕ್ಷನ್‌ನಲ್ಲಿ ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಅವರ ಪತ್ನಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ದುರ್ಘಟನೆ ಮೇ 10ರಂದು ಮಧ್ಯಾಹ್ನ ನಡೆದಿದೆ.


 ಮೃತರನ್ನು ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿ ನಿವಾಸಿ ಸದಾನಂದ ಆಚಾರ್ಯ(59) ಎಂದು ಗುರುತಿಸಲಾಗಿದೆ. ಇವರು ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅರಸಿನಮಕ್ಕಿ ಶಾಖೆಯಲ್ಲಿ ಉದ್ಯೋಗಿಯಾಗಿದ್ದರು. ಅಪಘಾತದ ವೇಳೆ ಇವರೊಂದಿಗೆ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಪತ್ನಿ ಉಷಾ ಅವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 


ಮಾಹಿತಿಯ ಪ್ರಕಾರ, ಸದಾನಂದ ಆಚಾರ್ಯ ಹಾಗೂ ಅವರ ಪತ್ನಿ ಅರಸಿನಮಕ್ಕಿಯಿಂದ ಉಪ್ಪಿನಂಗಡಿಗೆ ಬೈಕ್‌ನಲ್ಲಿ ಕೊಕ್ಕಡ ಮಾರ್ಗವಾಗಿ ತೆರಳುತ್ತಿದ್ದರು. ಗೋಳಿತ್ತೊಟ್ಟು ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕಿಸುವ ವೇಳೆ ಉಪ್ಪಿನಂಗಡಿಯಿಂದ ಶಿರಾಡಿ ಕಡೆಗೆ ಸಾಗುತ್ತಿದ್ದ ಕಾರು ಮತ್ತು ಬೈಕ್ ನಡುವೆ ಭಾರೀ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಬೈಕ್ ಸಂಪೂರ್ಣವಾಗಿ ಜಖಂಗೊಂಡಿದ್ದು, ಸದಾನಂದ ಆಚಾರ್ಯ ಅವರು ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳದಲ್ಲಿದ್ದ ಸಾರ್ವಜನಿಕರು ತಕ್ಷಣ ನೆರವಿಗೆ ಧಾವಿಸಿದರೂ, ಅಷ್ಟರಲ್ಲೇ ಅವರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಅಪಘಾತದಲ್ಲಿ ಗಾಯಗೊಂಡ ಉಷಾ ಅವರನ್ನು ಸ್ಥಳೀಯರು ಹಾಗೂ ಪೊಲೀಸರು ಸೇರಿ ತಕ್ಷಣ ಆಸ್ಪತ್ರೆಗೆ ಸಾಗಿಸಿದ್ದಾರೆ. 


ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಪುತ್ತೂರು ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ವಾಹನಗಳನ್ನು ತೆರವುಗೊಳಿಸಿ ಸಂಚಾರವನ್ನು ಸುಗಮಗೊಳಿಸಲಾಯಿತು. ಈ ಸಂಬಂಧ ಪುತ್ತೂರು ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ನಿಖರ ಕಾರಣ ಕುರಿತು ತನಿಖೆ ಮುಂದುವರಿದಿದೆ. 

Post a Comment

0 Comments

Post a Comment (0)
3/related/default