ಉಡುಪಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಗಾಂಧಿ ಕುಟುಂಬದ ವಿರುದ್ಧ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ನೀಡಿದರೆನ್ನಲಾದ ವಿವಾದಾತ್ಮಕ ಮತ್ತು ದ್ವೇಷಪೂರಿತ ಹೇಳಿಕೆಗಳನ್ನು ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಶುಕ್ರವಾರ ನಗರದ ಜಟ್ಕಾ ಸ್ಟ್ಯಾಂಡ್ನಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಯಿತು.
ಜಿಲ್ಲೆಯ ವಿವಿಧ ಬ್ಲಾಕ್ ಕಾಂಗ್ರೆಸ್ ಘಟಕಗಳ ಅಧ್ಯಕ್ಷರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿ, ಶಾಸಕ ಯಶ್ಪಾಲ್ ಸುವರ್ಣ ಅವರ ಹೇಳಿಕೆಗಳನ್ನು ತೀವ್ರವಾಗಿ ವಿರೋಧಿಸಿದರು. ದ್ವೇಷದ ರಾಜಕಾರಣವನ್ನು ಕಾಂಗ್ರೆಸ್ ಸಹಿಸುವುದಿಲ್ಲ ಎಂದು ನಾಯಕರು ಒತ್ತಿ ಹೇಳಿದರು.
ಸಭೆಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಮುಖಂಡ ನಿಕೇತ್ ರಾಜ್ ಮೌರ್ಯ, "ನಾವು ಮಹಾತ್ಮ ಗಾಂಧಿಯವರ ತತ್ವ-ಸಿದ್ಧಾಂತಗಳನ್ನು ನಂಬುವವರು. ಪ್ರೀತಿ, ಸಹಿಷ್ಣುತೆ ಮತ್ತು ಪ್ರಜಾಪ್ರಭುತ್ವವೇ ನಮ್ಮ ಮಾರ್ಗ. ದ್ವೇಷದ ಭಾಷೆ ಬಳಸುವ ರಾಜಕಾರಣ ಈ ದೇಶದ ಸಂಸ್ಕೃತಿಯಲ್ಲ," ಎಂದು ಹೇಳಿದರು.
ಗಾಂಧಿ ಕುಟುಂಬ ದೇಶಕ್ಕಾಗಿ ಸಾಕಷ್ಟು ತ್ಯಾಗ ಮಾಡಿದೆ. ಅವರನ್ನು ವೈಯಕ್ತಿಕವಾಗಿ ಗುರಿಯಾಗಿಸಿ ಅವಹೇಳನಕಾರಿ ಭಾಷೆ ಬಳಸುವುದು ಖಂಡನೀಯ. ರಾಹುಲ್ ಗಾಂಧಿಯವರ ಜನಪರ ಹೋರಾಟ ಮತ್ತು ಹೆಚ್ಚುತ್ತಿರುವ ಜನಬೆಂಬಲದಿಂದ ಬಿಜೆಪಿ ನಾಯಕರಲ್ಲಿ ಆತಂಕ ಉಂಟಾಗಿದೆ ಎಂದು ಅವರು ಆರೋಪಿಸಿದರು.
ರಾಮಮಂದಿರದ ಹೆಸರಿನಲ್ಲಿ ರಾಜಕೀಯ ಮಾಡುವವರು ಮೊದಲು ಭ್ರಷ್ಟಾಚಾರದ ಆರೋಪಗಳಿಗೆ ಉತ್ತರಿಸಬೇಕು. ನಾವು ಎಂದಿಗೂ ಪ್ರಧಾನಿ ನರೇಂದ್ರ ಮೋದಿ ಅವರ ಕುಟುಂಬದ ಬಗ್ಗೆ ಅವಹೇಳನಕಾರಿ ಮಾತುಗಳನ್ನಾಡಿಲ್ಲ. ಆದರೆ ಬಿಜೆಪಿ ನಾಯಕರು ರಾಜಕೀಯ ಭಿನ್ನಾಭಿಪ್ರಾಯವನ್ನು ವೈಯಕ್ತಿಕ ನಿಂದನೆಯ ಮಟ್ಟಕ್ಕೆ ಇಳಿಸಿರುವುದು ವಿಷಾದನೀಯ ಎಂದು ನಿಕೇತ್ ರಾಜ್ ಮೌರ್ಯ ಹೇಳಿದರು.
ಬಳಿಕ ಮಾತನಾಡಿದ ಕಾಂಗ್ರೆಸ್ ಮುಖಂಡ ಸುಧೀರ್ ಕುಮಾರ್ ಮುರೋಳಿ, "ಸಾರ್ವಜನಿಕ ಜೀವನದಲ್ಲಿರುವ ಜನಪ್ರತಿನಿಧಿಗಳು ತಮ್ಮ ಭಾಷೆ ಮತ್ತು ವರ್ತನೆಯಲ್ಲಿ ಸಂಯಮ ಕಾಪಾಡಬೇಕು. ವೈಯಕ್ತಿಕ ನಿಂದನೆಗಳು ಯಾವುದೇ ರಾಜಕೀಯ ನಾಯಕನಿಗೂ ಶೋಭೆ ತರುವುದಿಲ್ಲ," ಎಂದರು.
ರಾಹುಲ್ ಗಾಂಧಿಯವರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ‘ಭಾರತ್ ಜೋಡೋ ಯಾತ್ರೆ’ ನಡೆಸುವ ಮೂಲಕ ದೇಶದ ಏಕತೆಗಾಗಿ ಸಂದೇಶ ನೀಡಿದ್ದಾರೆ. ಅಂತಹ ನಾಯಕರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುವುದು ಶಾಸಕ ಸ್ಥಾನದಲ್ಲಿರುವವರಿಗೆ ತಕ್ಕುದಲ್ಲ ಎಂದು ಅವರು ಅಭಿಪ್ರಾಯಪಟ್ಟರು.
ಪ್ರತಿಭಟನೆಯಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮುನಿಯಾಲು ಉದಯ ಕುಮಾರ್ ಶೆಟ್ಟಿ, ಪ್ರಸಾದ್ ರಾಜ್ ಕಾಂಚನ್, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಪ್ರಶಾಂತ್ ಜತ್ತನ್ನ, ಶುಭದ್ ರಾವ್, ಶರ್ಫುದ್ದೀನ್ ಶೇಖ್, ಸುನಿಲ್ ಬಂಗೇರ, ಅಮೃತ್ ಶೆಣೈ, ದಿನೇಶ್ ಹೆಗ್ಡೆ ಮೊಳಹಳ್ಳಿ, ಅಣ್ಣಯ್ಯ ಶೇರಿಗಾರ್, ಮೀನಾಕ್ಷಿ ಮಾಧವ ಬನ್ನಂಜೆ, ಡಾ. ಸುನೀತಾ ಶೆಟ್ಟಿ, ಜ್ಯೋತಿ ಹೆಬ್ಬಾರ್, ಮಲ್ಲಿಕಾ ಪೂಜಾರಿ ಸೇರಿದಂತೆ ಪಕ್ಷದ ಹಲವಾರು ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.
About the Author
Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.
📢 SUDDI LIVE WhatsApp Community
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.
📲 Join WhatsApp Community📢 SUDDI LIVE Facebook Page
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.
👍 Follow SUDDI LIVEನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️
